×
Ad

ಸಬ್ ಜ್ಯೂನಿಯರ್ ರ್ಯಾಂಕಿಂಗ್ : ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

Update: 2019-07-02 20:39 IST

ಉಡುಪಿ, ಜು.2: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆಫ್ ಬರೋಡ ಸಹ ಪ್ರಾಯೋಜಕತ್ವದಲ್ಲಿ 13ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಏರ್ಪಡಿಸಲಾದ ಆರು ದಿನಗಳ ಅಖಿಲ ಭಾರತ ಸಬ್ ಜ್ಯೂನಿಯರ್ ರ್ಯಾಂಕಿಂಗ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಮಂಗಳವಾರ ಮಣಿಪಾಲದ ಮರಿನಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಮಾತನಾಡಿ, ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಮಕ್ಕಳು ತೋರಿಸುವ ಆಸಕ್ತಿ ಕ್ಷೇತ್ರಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕಾ ಗಿದೆ. ಇದರಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿ ಪ್ರಾಯ ಪಟ್ಟರು.

ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾ ಇದರ ವೀಕ್ಷಕ ಸುಖಾಂತ ದಾಸ್ ಮಾತನಾಡಿ, ಇಂದು ಭಾರತದಲ್ಲಿ ಕ್ರೀಡೆಗೆ ಯುವ ಸಮು ದಾಯದಿಂದ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಕ್ರಿಕೆಟ್ ಮೊದಲ ಸ್ಥಾನದಲ್ಲಿದ್ದರೆ ಎರಡನೆ ಸ್ಥಾನದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಯುವಜನತೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಆದುದರಿಂದ ಈ ಕ್ರೀಡೆಯಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆಯ ಪ್ರೊ ಚಾನ್ಸೆಲರ್ ಡಾ.ಎಚ್. ಎಸ್. ಬಲ್ಲಾಳ್ ಮಾತನಾಡಿ, ಬ್ಯಾಡ್ಮಿಂಟನ್‌ನ್ನು ವರ್ಷದ 12 ತಿಂಗಳ ಕಾಲವೂ ಆಡಬಹುದಾಗಿದೆ. ಆದರೆ ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳನ್ನು ಮಳೆಗಾಲದಲ್ಲಿ ಆಡಲು ಆಗಲ್ಲ. ದೈಹಿಕ ಆರೋಗ್ಯದಿಂದ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಆದುದರಿಂದ ಕ್ರೀಡೆ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಬ್ಯಾಡ್ಮಿಂಟನ್ ಆಡುವ ಮೂಲಕ ಪಂದ್ಯಾಟಕ್ಕೆ ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾರಾಣಿ ಕೊರ್ಲಪಾಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟಕ್ಕೆ ಬ್ಯಾಂಕ್ ಆಫ್ ಬರೋಡಾದಿಂದ ನೀಡಲಾದ ಐದು ಲಕ್ಷ ರೂ. ಮೊತ್ತದ ಚೆಕನ್ನು ರವೀಂದ್ರ ರೈ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್‌ಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉದ್ಯಮಿ ಗಳಾದ ಗುರ್ಮೆ ಸುರೇಶ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಬಡಗಬೆಟ್ಟು ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಾಹೆ ಕ್ರೀಡಾ ನಿರ್ದೇಶಕ ಡಾ. ವಿನೋದ್ ನಾಯಕ್ ಉಪಸ್ಥಿತರಿದ್ದರು.

ಉಡುಪಿ ಶಾಸಕ ಹಾಗೂ ಅಸೋಸಿಯೇಶನ್ ಅಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ವಂದಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು. ಜು.6ರ ವರೆಗೆ ನಡೆಯುವ ಈ ಟೂರ್ನಿಯಲ್ಲಿ ದೇಶದ ಅಗ್ರ ಶ್ರೇಯಾಂಕಿತ ಸುಮಾರು ಒಂದು ಸಾವಿರ ಮಂದಿ ಆಟಗಾರರು ಮತ್ತು 50 ಮಂದಿ ತೀರ್ಪುಗಾರರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News