ಕುಡಿಯುವ ನೀರು ಒದಗಿಸುವ ಯೋಜನೆಗೆ 750 ಕೋಟಿ ಬಿಡುಗಡೆ: ಸಚಿವ ಯು.ಟಿ ಖಾದರ್

Update: 2019-07-02 16:29 GMT

ಕಲಬುರಗಿ, ಜು.2: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆಗೆ ಯೋಜನೆಯೊಂದನ್ನು ರೂಪಿಸಲಾಗಿದ್ದು, ಅದಕ್ಕಾಗಿ 750 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿ ನಗರ ವೇಗವಾಗಿ ಬೆಳೆಯುತ್ತಿದ್ದು ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯ ಒದಗಿಸುವುದು ಅದರಲ್ಲೂ ಕುಡಿಯುವ ನೀರು ಒದಗಿಸುವುದು ಪ್ರಮುಖ ಕರ್ತವ್ಯವಾಗಿದೆ ಎಂದರು.

ಕುಡಿಯುವ ನೀರು ಒದಗಿಸುವ ಯೋಜನೆಗಾಗಿ 750 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ರೀತಿಯ ಮೂಲಗಳಿಂದ ನೀರನ್ನು ತೆಗೆದುಕೊಂಡು ಸರಬರಾಜು ಮಾಡುವ ಯೋಜನೆ ಇದಾಗಿದ್ದು, ಮೂರು ತಿಂಗಳ ಒಳಗಾಗಿ ಯೋಜನೆಗೆ ಚಾಲನೆ ದೊರಕಲಿದೆ. ಮುಂದಿನ ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಯನ್ನು ಹೊರತುಪಡಿಸಿ ಅಮೃತ ಯೋಜನೆಯಡಿಯಲ್ಲಿ 140 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕುಡಿಯುವ ನೀರಿನ ಪೈಪ್‌ಲೈನ್‌ಗಳನ್ನು ಅಳವಡಿಸಲಾಗುವುದು ಎಂದು ಸಚಿವ ಖಾದರ್ ಮಾಹಿತಿ ನೀಡಿದರು.

ಹತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ರಾಜ್ಯದ 10 ನಗರಗಳಲ್ಲಿ ವೈಜ್ಞಾನಿಕ ನಾಲಾಗಳ ಅಭಿವೃದ್ದಿಗೆ ಹಾಗೂ ಸಮರ್ಪಕ ಯುಜಿಡಿ ವ್ಯವಸ್ಥೆ ಜಾರಿಗೊಳಿಸಲು ಪ್ರತಿ ಜಿಲ್ಲೆಗೆ 150 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಲಬುರಗಿ ನಗರ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗದಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಖಾದರ್, ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಘೋಷಣೆಗೆ ಕೆಲವು ನಿಯಮಾವಳಿಯನ್ನು ರೂಪಿಸಿದೆ. ಮೊದಲ ಹಂತದಲ್ಲಿ ಕೆಲ ನಗರಗಳು ಹಾಗೂ ಎರಡನೆಯ ಹಂತದಲ್ಲಿ ಮತ್ತೆ ಕೆಲ ನಗರಗಳನ್ನು ಆಯ್ಕೆ ಮಾಡಿಕೊಂಡಿದೆ. ಎರಡನೆ ಬಾರಿಗೆ ಕಲಬುರಗಿ ಜಿಲ್ಲೆಯನ್ನು ಶಿಫಾರಸ್ಸು ಮಾಡಲಾಗುವುದು ಎಂದು ನುಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ 100 ಕೋಟಿ ಬಿಡುಗಡೆ ಮಾಡಿದರೆ, ರಾಜ್ಯ ಸರಕಾರ 150 ಕೋಟಿ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ನಗರದ ಸಮರ್ಪಕ ಅಭಿವೃದ್ದಿಗೆ ಸಹಕಾರಿಯಾಗುವ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ನಗರದಲ್ಲಿನ ಅಕ್ರಮ ಒತ್ತುವರಿ ಕುರಿತು ಸಮೀಕ್ಷೆ ಮಾಡಲಾಗುವುದು. ಜೊತೆಗೆ ಸರಕಾರದ ಮಾನದಂಡಗಳ ಬಗ್ಗೆ ಚರ್ಚೆ ಮಾಡಿ ಅಕ್ರಮ ಅತಿಕ್ರಮಣ ಎಂದು ಯಾವ ಜಾಗವನ್ನು ಕರೆಯಬಹುದು ಹಾಗೂ ಹಾಗೆ ಅಕ್ರಮ ಎಂದು ಗುರುತಿಸುವ ಜಾಗಗಳನ್ನು ಯಾವ ರೀತಿ ತೆರವುಗೊಳಿಸಬೇಕು ಎನ್ನುವುದರ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ಇದಕ್ಕೆ ಕನಿಷ್ಟ ನಾಲ್ಕು ವಾರಗಳ ಸಮಯ ಬೇಕಾಗುತ್ತದೆ. ಈ ಸಂಬಂಧ ಸಚಿವರು ಆದೇಶ ಹೊರಡಿಸಿದರೆ ಈ ಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಇತ್ತೀಚಿಗೆ ಅಕ್ರಮ ಒತ್ತುವರಿ ಜಾಗವೊಂದನ್ನು ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳು ಮುಂದಾದಾಗ ರಾಜಕೀಯ ಒತ್ತಡ ತಂದು ಅಂದಿನ ಪ್ರಕ್ರಿಯೆಯನ್ನು ಮುಂದೂಡಿಸಿ ನಂತರ ಒತ್ತುವರಿದಾರರು ಕೋರ್ಟ್‌ಗೆ ಹೋದ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, ಅಕ್ರಮ ಜಾಗಗಳ ಒತ್ತುವರಿ ತೆರವುಗೊಳಿಸಲು ಸ್ಥಳೀಯ ಮಟ್ಟದಲ್ಲಿ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ, ಸಾರ್ವಜನಿಕರ ಹಾಗೂ ಮಾಧ್ಯಮದ ಸಹಕಾರ ಬೇಕಾಗುತ್ತದೆ. ಆಗಷ್ಟೇ ಇಂತಹ ಪ್ರಮುಖ ಕಾರ್ಯಕ್ರಮಗಳನ್ನು ಸುಲಭವಾಗಿ ಕೈಗೆತ್ತಿಕೊಳ್ಳಬಹುದು ಎಂದು ಹೇಳಿದರು.

ಖಾಲಿ ಹುದ್ದೆಗಳು: ವಿವಿಧ ಇಲಾಖೆಗಳಲ್ಲಿ 76 ಕ್ಕೂ ಅಧಿಕ ಪ್ರಮುಖ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳನ್ನು ತುಂಬಲು ಹಾಗೂ ನೇಮಕವಾದ ಅಧಿಕಾರಿಗಳನ್ನು ಹೈಕ ಭಾಗದಲ್ಲಿ ಕಡ್ಡಾಯವಾಗಿ 10 ವರ್ಷ ಸೇವೆ ಸಲ್ಲಿಸುವಂತೆ ನಿಯಮಾವಳಿ ರೂಪಿಸಲು ಸಿಎಂಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸ್ಪಂದಿಸಿರುವ ಸಿಎಂ ಆದೇಶ ಮಾಡಿದ್ದಾರೆ ಎಂದು ನಗರಾಭಿವೃದ್ದಿ ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಶಾಸಕರಾದ ಅಪ್ಪುಗೌಡ ಪಾಟೀಲ್, ಬಸವರಾಜ ಮತ್ತಿಮೂಡ, ಬಿ.ಜಿ.ಪಾಟೀಲ್, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪಕಮಕನೂರು ಸೇರಿದಂತೆ ಮತ್ತಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News