×
Ad

ಮೋದಿ ಸರಕಾರ ರೈತರ ಮೊರೆ ಕೇಳದಷ್ಟು ಕಿವುಡಾಗಿದೆ: ಸಿದ್ದರಾಮಯ್ಯ

Update: 2019-07-05 19:14 IST

ಬೆಂಗಳೂರು, ಜು.5: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಇಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

2019-20ನೇ ಸಾಲಿನ ಕೇಂದ್ರ ಸರಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತಕ್ಕೆ ಮಾರಕವಾಗಿದೆ. ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಯುವ ಜನತೆ ನಿರುದ್ಯೋಗದಿಂದಾಗಿ ಬಳಲುತ್ತಿದ್ದಾರೆ. ಈ ಎರಡು ಮುಖ್ಯ ಸಮಸ್ಯೆಗಳನ್ನು ನರೇಂದ್ರ ಮೋದಿ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ.

ಸಾಲ ಮನ್ನಾಕ್ಕಾಗಿ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ರಾಜ್ಯದ ಹಿಂದಿನ ಕಾಂಗ್ರೆಸ್ ಸರಕಾರ ಮತ್ತು ಈಗಿನ ಮೈತ್ರಿ ಸರಕಾರಗಳೆರಡೂ ರೈತರ ಮೊರೆಗೆ ಓಗೊಟ್ಟು ಸಾಲ ಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದೆ. ಆದರೆ ನರೇಂದ್ರ ಮೋದಿ ಸರಕಾರ ರೈತರ ಮೊರೆ ಕೇಳದೆ ಇರುವಷ್ಟು ಕಿವುಡಾಗಿದೆ. ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗಿದೆ. ನಿರುದ್ಯೋಗ ತಾಂಡವವಾಡುತ್ತಿರುವಾಗ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿರುವುದರಿಂದ ನಿರುದ್ಯೋಗದ ಪ್ರಮಾಣ ಮಾತ್ರವಲ್ಲ, ವಲಸೆ ಪ್ರಮಾಣ ಕೂಡಾ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆ ಎಂದು 5 ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರಕಾರ ಈ ಆಯವ್ಯಯ ಪತ್ರದಲ್ಲಿಯೂ ಅದರ ಬಗ್ಗೆ ಉಲ್ಲೇಖ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.0.3ನಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರಕಾರದ ರೈತ ವಿರೋಧಿ ನೀತಿಗೆ ಸಾಕ್ಷಿ. ಇಲ್ಲಿಯವರೆಗೆ ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣದ ಬಗ್ಗೆ ಕಣ್ಣು ಮುಚ್ಚಾಲೆ ಆಡುತ್ತಾ ಬಂದಿರುವ ಕೇಂದ್ರ ಸರಕಾರ ಮೊದಲ ಬಾರಿಗೆ ನಿರುದ್ಯೋಗದ ಪ್ರಮಾಣ ಶೇ.45 ತಲುಪಿದೆ ಎಂದು ಒಪ್ಪಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

‘ಕಾಯಕವೇ ಕೈಲಾಸ’ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿರಲಿ. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ ನರೇಂದ್ರ ಮೋದಿ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ. ಸಾರಿಗೆ ದುಬಾರಿಯಾಗಲಿದೆ. ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News