ಸರ್ಕಾರ ಅಸ್ಥಿರಕ್ಕೆ ಪ್ರಯತ್ನ ಆರೋಪ: ಬಿಜೆಪಿ ವಿರುದ್ಧ ಕೊಡಗು ಕಾಂಗ್ರೆಸ್ ಪ್ರತಿಭಟನೆ

Update: 2019-07-09 12:56 GMT

ಮಡಿಕೇರಿ, ಜು.9: ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಅಧಿಕಾರ ಹಿಡಿಯಬೇಕೆನ್ನುವ ದುರಾಸೆಯಿಂದ ಬಿಜೆಪಿ ‘ಕುದುರೆ ವ್ಯಾಪಾರ’ಕ್ಕೆ ಇಳಿದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಗಾಂಧಿ ಮಂಟಪದ ಎದುರು ಧರಣಿ ನಡೆಸಿತು.

ಜ.ತಿಮ್ಮಯ್ಯ ವೃತ್ತದಲ್ಲಿ ‘ಮಾನವ ಸರಪಳಿ’ ರಚಿಸಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಅಧಿಕಾರವನ್ನು ಹಿಡಿಯುವ ಹಟದಲ್ಲಿ ಬಿಜೆಪಿ ವಾಮಮಾರ್ಗವನ್ನು ಅನುಸರಿಸುತ್ತಿದೆ. ಇದನ್ನು ರಾಜ್ಯದ ಜನತೆ ಸಹಿಸುವುದಿಲ್ಲವೆಂದ ಪಕ್ಷದ ಪ್ರಮುಖರು ಈ ರೀತಿಯ ರಾಜಕಾರಣಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಜನರಲ್ ತಿಮ್ಮಯ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್ಸಿಗರು ಅಲ್ಲಿ ‘ಮಾನವ ಸರಪಳಿ’ ರಚಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ,  ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬಿಜೆಪಿ ಕುದುರೆ ವ್ಯಾಪಾರ ಮಾಡುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಿ ತಾವು ಅಧಿಕಾರಕ್ಕೇರಬೇಕೆಂದು ಬಿಜೆಪಿ ವಾಮಮಾರ್ಗಕ್ಕೆ ಇಳಿದಿರುವುದು ಖಂಡನೀಯ ಎಂದರು. 

ಪ್ರಜಾಸತ್ತಾತ್ಮಕವಾಗಿ ರೂಪುಗೊಂಡ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸಿ, ಅಧಿಕಾರ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ, ಮೈತ್ರಿ ಸರ್ಕಾರ ಬಲಿಷ್ಟವಾಗಿದ್ದು, ಉರುಳುವ ಸಾಧ್ಯತೆಯೇ ಇಲ್ಲ. ಇನ್ನಾದರೂ ಬಿಜೆಪಿ ತನ್ನ ಕೆಟ್ಟ ಚಾಳಿಯನ್ನು ಬಿಟ್ಟು, ಮೈತ್ರಿ ಸರ್ಕಾರದ ಆಡಳಿತಕ್ಕೆ ತೊಡಕನ್ನುಂಟು ಮಾಡದಿರಲಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಕೆಪಿಸಿಸಿ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರಸಭೆ ಮಾಜಿ ಸದಸ್ಯ ಚುಮ್ಮಿ ದೇವಯ್ಯ, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರಯ್ಯ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನೀರ ಮೈನಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎ.ಕೆ.ಹ್ಯಾರಿಸ್, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಹನೀಫ್ ಸಂಪಾಜೆ, ಪವನ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News