ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

Update: 2019-07-10 14:09 GMT

ಬೆಂಗಳೂರು, ಜು.10: ರಾಜ್ಯಪಾಲ ವಜುಬಾಯಿ ವಾಲಾ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತಿದ್ದು, ಬಿಜೆಪಿ ರಾಜಭವನವನ್ನು ತನ್ನ ಪಕ್ಷದ ಕಚೇರಿಯಂತೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರೊಂದಿಗೆ ರಾಜ್ಯಪಾಲರು ಶಾಸಕರೊಂದಿಗೆ ಚರ್ಚಿಸಿದ್ದು, ನಗರ ಪೊಲೀಸ್ ಆಯುಕ್ತರನ್ನು ಕರೆಸಿಕೊಂಡಿದ್ದು ಏಕೆ? ರಾಜೀನಾಮೆ ಪತ್ರ ಶೀಘ್ರ ಇತ್ಯರ್ಥಪಡಿಸಿ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದು ಏಕೆ ಎಂದು ಪ್ರಶ್ನಿಸಿದರು.

ರಾಜೀನಾಮೆ ನೀಡಿರುವ ಅತೃಪ್ತ ಶಾಸಕರನ್ನು ಬಿಜೆಪಿ ಬಲಿ ತೆಗೆದುಕೊಳ್ಳುತ್ತಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರು ಅನರ್ಹಗೊಂಡ ನಂತರ ಅವರನ್ನು ಯಾರೂ ಕೇಳುವುದಿಲ್ಲ ಎಂಬುದನ್ನು ಅತೃಪ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಸ್ಪೀಕರ್ ರಮೇಶ್‌ ಕುಮಾರ್ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಅವರ ವಿರುದ್ಧ ಬಿಜೆಪಿ ಆರೋಪ ಮಾಡುವುದು, ಸುಪ್ರೀಂಕೋರ್ಟ್ ಮೆಟ್ಟಿಲೇರಿರುವುದು ಬಿಜೆಪಿ ಹತಾಶೆ ಪ್ರತೀಕ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News