ಶಾಸಕರ ರಾಜೀನಾಮೆ ಅಂಗೀಕರಿಸಲು ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

Update: 2019-07-11 16:59 GMT

ಬೆಂಗಳೂರು, ಜು.11: ಜೆಡಿಎಸ್, ಕಾಂಗ್ರೆಸ್ ಶಾಸಕರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲು ವಿಧಾನಸಭೆ ಸ್ಪೀಕರ್ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. 

ಈ ಕುರಿತು ವಕೀಲ ಎಸ್.ನಟರಾಜ್ ಶರ್ಮಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಶಾಸಕರು ಸೇರಿ 13 ಶಾಸಕರು ಈಗಾಗಲೇ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೂ ಸ್ಪೀಕರ್ ಅವರು ರಾಜೀನಾಮೆ ಪತ್ರವನ್ನು ಅಂಗೀಕರಿಸಲು ತಡ ಮಾಡುತ್ತಿದ್ದಾರೆ. ಈ ಕೂಡಲೆ ಅಂಗೀಕರಿಸಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಶಾಸಕರ ರಾಜೀನಾಮೆಯನ್ನು ಸ್ವೀಕರಿಸದೆ ಸ್ಪೀಕರ್ ಅವರು ವಿಳಂಬನೀತಿಯನ್ನು ಅನುಸರಿಸಿದರೆ ಸಮಾಜದಲ್ಲಿ ಗದ್ದಲದ ವಾತಾವರಣ ಉಂಟಾಗುತ್ತದೆ. ಅಲ್ಲದೆ, ಸ್ಪೀಕರ್ ಅವರು ರಾಜೀನಾಮೆ ನೀಡಿದ ಶಾಸಕರನ್ನು ವಿಚಾರಣೆಗೆ ಕರೆದು ವಿಚಾರಣೆ ಮಾಡುತ್ತಾ ನಿಂತರೆ ಸಾರ್ವಜನಿಕರ ಹಣ ಖರ್ಚು ಆಗುತ್ತದೆ. ಹೀಗಾಗಿ, ರಾಜೀನಾಮೆ ಅಂಗೀಕರಿಸಲು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News