ಮಡಿಕೇರಿ: ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ: ತರಬೇತಿ ನೀಡಲು ಜಿಲ್ಲಾಧಿಕಾರಿ ಸೂಚನೆ

Update: 2019-07-13 19:00 GMT

ಮಡಿಕೇರಿ, ಜು.13 :ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಸೇರಿದಂತೆ ಅಗತ್ಯ ಕೌಶಲ್ಯ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಮನಿತ ಮಹಿಳೆಯರ ಅಭಿವೃದ್ಧಿಗಾಗಿ ರಚಿಸಲಾದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ಟ್ರಾನ್ಸ್‍ಜೆಂಡರ್ಸ್‍ರವರ ಜೀವನ ಮಟ್ಟವನ್ನು ಸುಧಾರಿಸಲು ಜಿಲ್ಲಾ ಮಟ್ಟದ ಕೋಶ ರಚನೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅವರ ಹಾಗೂ ಅವಲಂಭಿತ ಕುಟುಂಬಗಳಿಗೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅರುಂಧತಿ ಅವರು ಜಿಲ್ಲೆಯಲ್ಲಿ ಚೇತನಾ ಯೋಜನೆಯಡಿ 35 ಮಹಿಳೆಯರಿಗೆ ಆರ್ಥಿಕ ಸೌಲಭ್ಯ ಒದಗಿಸಲಾಗಿದೆ. ಜಿಲ್ಲೆಯಲ್ಲಿನ  ಟ್ರಾನ್ಸ್‍ಜೆಂಡರ್ ವ್ಯಕ್ತಿತ್ವದವರ ಜೀವನ ಮಟ್ಟವನ್ನು ಸುಧಾರಿಸಲು 50 ಸಾವಿರ ರೂ.ಸಾಲ ನೀಡಲಾಗುತ್ತದೆ. ಇದರಲ್ಲಿ 25 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ದಮನಿತ ಮಹಿಳೆಯರ ಜೀವನ ಮಟ್ಟ ಸುಧಾರಿಸುವಲ್ಲಿ ಸ್ವಯಂ ಉದ್ಯೋಗವನ್ನು ನೀಡಬೇಕು ಮತ್ತು  ಸರ್ಕಾರದ ಅಗತ್ಯ ಸೌಲಭ್ಯಗಳನ್ನು ಪೂರೈಸುವ ಮೂಲಕ ಇಲಾಖೆಗಳು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು. 

ದಮನಿತ ಮಹಿಳೆಯರ ಜೀವನ ಮಟ್ಟವನ್ನು ಉತ್ತಮವಾಗಿ ಸುಧಾರಿಸಲು ಅವರ ಆಶಕ್ತಿಯ ಸ್ವಯಂ ಉದ್ಯೋಗವನ್ನು ನೀಡಬೇಕು. ಬ್ಯೂಟಿಷಿಯನ್ ಮತ್ತು ಹೊಲಿಗೆ ತರಬೇತಿಯನ್ನು ಹೆಚ್ಚಾಗಿ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ, ಡಿವೈಎಸ್‍ಪಿ ಸುಂದರ್ ರಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಆನಂದ್, ವೈದ್ಯಕೀಯ ಶಿಕ್ಷಣ ಸಂಸ್ಥೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನ್, ಸಬ್ ಇನ್ಸ್ ಪೆಕ್ಟರ್ ಅನೂಪ್ ಮಾದಪ್ಪ, ಸಿಡಿಪಿಒ ಕಚೇರಿಯ ವ್ಯವಸ್ಥಾಪಕರಾದ ಸವಿತಾ, ವಕೀಲರಾದ ಮೀನಾಕುಮಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳಾದ ಜಾಯ್ಸ್ ಮೇಜೆಜಸ್ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News