ಗಾಂಜಾ ಸಾಗಾಟ: ಇಬ್ಬರು ಆರೋಪಿಗಳ ಬಂಧನ

Update: 2019-07-15 14:34 GMT

ಮಂಗಳೂರು, ಜು.15:  ಗಾಂಜಾ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಜಪ್ಪಿನಮೊಗರು ತಂದೊಳಿಗೆ ನಿವಾಸಿ ನಿಹಾಲ್ ಎಡ್ವಿನ್ ಮುತ್ತು, ಬೆಂದೂರ್‌ವೆಲ್ ನಿವಾಸಿ ತ್ರಿಶೂಲ್ ಬಂಧಿತ ಆರೋಪಿಗಳು.

ಘಟನೆ ವಿವರ: ಸೋಮವಾರ ತಣ್ಣೀರ್‌ಬಾವಿ ರಸ್ತೆಯಲ್ಲಿನ ಐಒಸಿಎಲ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ವಾಹನದಿಂದ ಇಬ್ಬರು ಓಡಲು ಯತ್ನಿಸಿದ್ದಾರೆ. ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಗಾಂಜಾ ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳಿಂದ ಎರಡು ಸಾವಿರ ರೂ. ಮೌಲ್ಯದ 20 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಲಾದ ಹ್ಯೂಂಡೈ ಕಾರು, ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.  5.17 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಮಾರ್ಗ ದರ್ಶನದಂತೆ ಮಂಗಳೂರು ಉತ್ತರ ಎಸಿಪಿ ಶ್ರೀನಿವಾಸ್‌ಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೋಹನ್ ಕೊಟ್ಟಾರಿ, ಉಮೇಶ್‌ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News