ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ, ಸುದ್ದಿ ವಾಹಿನಿಗಳಿಗೆ ನೋಟಿಸ್ ಜಾರಿ
ಬೆಂಗಳೂರು, ಜು.18: ವಿಧಾನಸಭೆ ಸಭಾಪತಿ ರಮೇಶ್ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸಿಟಿ ಸಿವಿಲ್ ಕೋರ್ಟ್ ಬಿಜೆಪಿ ಹಾಗೂ ಸುದ್ದಿ ವಾಹಿನಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಕಾಂಗ್ರೆಸ್ ಪಕ್ಷದ ಮಾಧ್ಯಮ ಸಲಹೆಗಾರ ಎ.ಎನ್.ನಟರಾಜಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಸಿಟಿ ಸಿವಿಲ್ ಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಸಭಾಪತಿ ರಮೇಶ್ಕುಮಾರ್ ಅವರನ್ನು ಅವರಿಗೆ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕೆ.ಎಸ್.ಈಶ್ವರಪ್ಪ, ಬಿಜೆಪಿ ಪಕ್ಷ, ಮುದ್ರಣ ಮಾಧ್ಯಮ, ಸುದ್ದಿ ವಾಹಿನಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ಎಂದು ಆರೋಪಿಸಿವೆ. ಹೀಗಾಗಿ, ಸ್ಪೀಕರ್ಗೆ ಇಂತಹ ಹೇಳಿಕೆಗಳಿಂದ ಘನತೆಗೆ ಧಕ್ಕೆಯಾಗುತ್ತದೆ. ಇಂತಹ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ನೀಡಲು ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಜೆಪಿ ಪಕ್ಷ, ಸುದ್ದಿ ವಾಹಿನಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.