ಜು.22ರವರೆಗೆ ಭಾರೀ ಮಳೆ ಸಾಧ್ಯತೆ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

Update: 2019-07-19 14:38 GMT

ಮಂಗಳೂರು, ಜು.19: ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಜು.22ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ದಿನಪ್ರತಿ 200 ಮಿ.ಮೀ.ಗೂ ಹೆಚ್ಚು ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ (ಜು.22ರವರೆಗೆ) ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಕಟ್ಟೆಚ್ಚರ ವಹಿಸಿದೆ.

ಕರಾವಳಿಯಲ್ಲಿ ವರುಣಾರ್ಭಟ: ದ.ಕ. ಜಿಲ್ಲೆಯಾದ್ಯಂತ ಶುಕ್ರವಾರವೂ ಮಳೆಯ ಆರ್ಭಟ ಮುಂದುವರಿದಿದೆ. ಗುರುವಾರ ಆರಂಭವಾದ ಮಳೆ ಶುಕ್ರವಾರವೂ ಮುಂದುವರಿದಿದೆ.

ಶುಕ್ರವಾರ ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಗಳೂರು ನಗರದ ಹಲವೆಡೆ ರಸ್ತೆ ಮೇಲೆ ನೀರು ಹರಿದು ಅಡಚಣೆ ಉಂಟಾಗಿತ್ತು. ಆದರೆ ಗುರುವಾರದಂತೆ ಕೃತಕ ಪ್ರವಾಹ ಪರಿಸ್ಥಿತಿ ದೊಡ್ಡ ಮಟ್ಟದಲ್ಲಿ ಕಂಡುಬರಲಿಲ್ಲ. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮೂಡುಬಿದಿರೆಯಲ್ಲೂ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯ ನದಿಗಳೆಲ್ಲ ತುಂಬಿ ಹರಿಯುತ್ತಿವೆ.

ರಜೆ ಘೋಷಣೆ: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು (ಪಿಯುವರೆಗೆ)ಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನಿರ್ಬಂಧ: ಕಡಲು ಪ್ರಕ್ಷುಬ್ಧವಾಗಿರುವುದರಿಂದ ಇನ್ನೂ ಮೂರು ದಿನಗಳ ಕಾಲ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಕಡಲ ತೀರ, ನದಿ ಪ್ರದೇಶಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧಿಸಲಾಗಿದೆ. ನೀರು ನಿಲ್ಲುವ ತಗ್ಗು ಪ್ರದೇಶ, ಕೆರೆ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ವಿನಂತಿಸಿದೆ.

ಕಂಟ್ರೋಲ್ ರೂಂ ಸರ್ವಸಜ್ಜು: ವಿಕೋಪ ಪರಿಸ್ಥಿತಿ ನಿಯಂತ್ರಿಸಿ ಜನರ ಸಮಸ್ಯೆಗಳಿಗೆ ಸಕಾಲಿಕವಾಗಿ ಸ್ಪಂದಿಸಲು ಆಯಾ ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂಗಳನ್ನು ಸಕ್ರಿಯಗೊಳಿಸಲಾಗಿದೆ. ದ.ಕ. ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ದೂ. ಸಂಖ್ಯೆ 1077ಗೆ ಕರೆ ಮಾಡಿ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ.

ತೇವಾಂಶಭರಿತ ಚಳಿ: ದ.ಕ. ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿ ಒಂದೂವರೆ ತಿಂಗಳಾದರೂ ಮಳೆಗಾಲದ ವಾತಾವರಣವೇ ಇರಲಿಲ್ಲ. ಸದಾ ಬಿಸಿಲು, ಮೋಡ ಕವಿದ ವಾತಾವರಣ, ಆಗಾಗ ಮಳೆಯಾಗುತ್ತಿತ್ತು. ಇದೀಗ ಒಂದೂವರೆ ತಿಂಗಳ ಬಳಿಕ ಜಿಲ್ಲಾದ್ಯಂತ ಮಳೆಗಾಲದ ತೇವಾಂಶ ಭರಿತ ಚಳಿ ವಾತಾವರಣ ಆವರಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇದುವರೆಗೆ ಮಳೆಯಾಗದೆ ಇದ್ದುದರಿಂದ ಬತ್ತ ನಾಟಿ ವಿಳಂಬವಾಗಿತ್ತು. ಈಗ ನಿರಂತರ ಮಳೆಯಾಗುತ್ತಿರುವುದರಿಂದ ಕೃಷಿಕರು ಹರ್ಷಚಿತ್ತರಾಗಿದ್ದು, ಕೃಷಿ ಚಟುವಟಿಕೆ ಬಿರುಸುಗೊಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಕೋಪ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶನಿವಾರ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರವಿವಾರದ ಮಳೆಯ ಪರಿಸ್ಥಿತಿ ನೋಡಿ ಸೋಮವಾರದ ರಜೆಯನ್ನು ನಿರ್ಧರಿಸಲಾಗುವುದು.
- ಸಸಿಕಾಂತ್ ಸೆಂಥಿಲ್, ದ.ಕ. ಜಿಲ್ಲಾಧಿಕಾರಿ

ಮೀನುಗಾರರಿಗೆ ಎಚ್ಚರಿಕೆ:
ಕರ್ನಾಟಕ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಜು.20ರಿಂದ 22ರವರೆಗೆ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ ಎಂದು ದ.ಕ. ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಮಳೆ ವಿವರ
ಬಂಟ್ವಾಳ      - 79.2 ಮಿ.ಮೀ.
ಬೆಳ್ತಂಗಡಿ      - 42.4 ಮಿ.ಮೀ.
ಮಂಗಳೂರು  - 53.1 ಮಿ.ಮೀ.
ಪುತ್ತೂರು      - 21.2 ಮಿ.ಮೀ.
ಸುಳ್ಯ          - 20.1 ಮಿ.ಮೀ.
ಸರಾಸರಿ      - 43.2 ಮಿ.ಮೀ.
ನೇತ್ರಾವತಿ   - 5.2 ಮೀಟರ್
ಕುಮಾರಧಾರ- 10 ಮೀಟರ್
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News