ಸಾಲಬಾಧೆ: ರೈತ ಮಹಿಳೆ ಆತ್ಮಹತ್ಯೆ
Update: 2019-07-19 18:02 GMT
ಮಂಡ್ಯ, ಜು.19: ಸಾಲಬಾಧೆ ತಾಳಲಾರದೆ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಆಲಂಬಾಡಿಕಾವಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದಲಿತ ಕಾಲನಿಯ ಲೇಟ್ ಚೆಲುವಯ್ಯ ಅವರ ಪತ್ನಿ ಜಯಮ್ಮ(63) ಆತ್ಮಹತ್ಯೆ ಮಾಡಿಕೊಂಡಿದ್ದು, ಇವರಿಗೆ ಸುಮಾರು ಎರಡು ಎಕರೆ ಜಮೀನು ಇದೆ ಎನ್ನಲಾಗಿದೆ.
ಕೃಷಿ ಚಟುವಟಿಕೆಗೆ ಬ್ಯಾಂಕ್ ಸೇರಿದಂತೆ ಖಾಸಗಿಯವರಿಂದ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಬೆಳೆ ವಿಫಲವಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.