ನವಿಲು ಕೊಂದ ಆರೋಪದಲ್ಲಿ ವ್ಯಕ್ತಿಯ ಥಳಿಸಿ ಹತ್ಯೆ

Update: 2019-07-20 15:48 GMT

ಭೋಪಾಲ್, ಜು. 20: ನವಿಲು ಕೊಂದಿರುವುದಾಗಿ ಆರೋಪಿಸಿ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ನಿಮಚ್‌ನಲ್ಲಿ ಶುಕ್ರವಾರ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಹೀರಾಲಾಲ್ ಬಂಚಾಡಾ ಎಂದು ಗುರುತಿಸಲಾಗಿದೆ. ಗುಂಪಿನಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

‘‘ಕೆಲವರು ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್ ತಂಡವೊಂದು ಗ್ರಾಮಕ್ಕೆ ಧಾವಿಸಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿತು. ಆದರೆ, ಆತ ಅನಂತರ ಮೃತಪಟ್ಟ’’ ಎಂದು ನಿಮಚ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ರಾಕೇಶ್ ಸಾಗರ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನವಿಲು ಕೊಂದ ಆರೋಪದಲ್ಲಿ ಹೀರಾಲಾಲ್ ಬಂಚಾಡಾ, ಆತನ ಪುತ್ರ ರಾಹುಲ್ ಹಾಗೂ ಇತರ ಮೂವರು ವಿರುದ್ಧ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News