ನೀತಿ ಸಂಹಿತೆ ಉಲ್ಲಂಘನೆ ಆರೋಪ: ಡಾ.ಜಿ.ಪರಮೇಶ್ವರ್ ವಿರುದ್ಧದ ಪ್ರಕರಣ ರದ್ದು
Update: 2019-07-23 17:40 GMT
ಬೆಂಗಳೂರು, ಜು.23: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಪ್ರಚಾರದ ವೇಳೆ ಸಾವಳಗಿ ಗ್ರಾಮದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುತ್ತ ಗ್ರಾಮದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಮತ ಚಲಾಯಿಸಿದರೆ ಮೂರು ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದರು. ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ದೂರು ನೀಡಿದ್ದರು.
ಎಫ್ಐಆರ್ ದಾಖಲಿಸಿಕೊಂಡಿದ್ದ ಜಮಖಂಡಿ ಪೊಲೀಸರು ವಿಚಾರಣೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ಇದನ್ನು ಆಧರಿಸಿ ವಿಶೇಷ ನ್ಯಾಯಾಲಯ 2019ರ ಎ.25ರಂದು ಸಮನ್ಸ್ ಜಾರಿಗೊಳಿಸಿ ಮೇ 31ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದೀಗ ಹೈಕೋರ್ಟ್ ನ್ಯಾಯಪೀಠವು ಪರಮೇಶ್ವರ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.