‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂಬ ಅತೃಪ್ತ ಶಾಸಕರ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

Update: 2019-07-25 07:45 GMT

ಬೆಂಗಳೂರು, ಜು.25: ‘ಸಿದ್ದರಾಮಯ್ಯ ನಮ್ಮ ನಾಯಕರು’ ಎಂದು ಅತೃಪ್ತ ಶಾಸಕರು ಎಂದು ನೀಡಿರುವ ಹೇಳಿಕೆ ತಪ್ಪು ಮುಚ್ಚಿಕೊಳ್ಳುವ ದುರುದ್ದೇಶವನ್ನು ಹೊಂದಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ‌‌ ನಾಯಕರು' ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News