ಟಿಪ್ಪು ಜಯಂತಿ ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು, ಜು.30: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು 2016ರಲ್ಲಿ ಆಚರಣೆಗೆ ಜಾರಿಗೆ ತಂದಿದ್ದ ‘ಮೈಸೂರು ಹುಲಿ’ ಹಝ್ರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಆಚರಿಸುತ್ತಿರುವ ಹಝ್ರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಮಂಗಳವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಟಿಪ್ಪು ಸುಲ್ತಾನ್ ಜಯಂತಿ ರದ್ದುಗೊಳಿಸುವ ಸಂಬಂಧ ಬರೆದಿರುವ ಪತ್ರದ ಕುರಿತು ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಟಿಪ್ಪು ಜಯಂತಿಯನ್ನು ಪ್ರತಿ ವರ್ಷ ಸರಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಟಿಪ್ಪು ಜಯಂತಿ ಆಚರಣೆ ವಿರುದ್ಧ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆದಿದ್ದು, ಜಿಲ್ಲೆಯ ಜನರೆಲ್ಲರೂ ಈ ಕಾರ್ಯಕ್ರಮದ ಆಚರಣೆಯ ವಿರುದ್ಧವಿದ್ದಾರೆ ಎಂದು ಕೆ.ಜಿ.ಬೋಪಯ್ಯ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಆಯೋಜಿಸಿದ್ದರಿಂದ ಜಿಲ್ಲೆಯಲ್ಲಿ ಸಾವುಗಳು ಸಂಭವಿಸುತ್ತಿದ್ದು, ಸಾರ್ವಜನಿಕರ ಮತ್ತು ಸರಕಾರಿ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿಯಾಗಿರುತ್ತದೆ. ಅಲ್ಲದೆ, ಇಂದಿಗೂ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಇದ್ದು, ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ. ಆದುದರಿಂದ, ಈ ಟಿಪ್ಪು ಜಯಂತಿಯನ್ನು ಸರಕಾರದಿಂದ ಆಚರಣೆ ಮಾಡುವ ಆದೇಶವನ್ನು ಕೂಡಲೇ ರದ್ದುಪಡಿಸಲು ಅಗತ್ಯ ಆದೇಶ ನೀಡುವಂತೆ ಮುಖ್ಯಮಂತ್ರಿಗೆ ಬೋಪಯ್ಯ ಮನವಿ ಮಾಡಿದ್ದರು.
ಬೋಪಯ್ಯ ಕೋರಿಕೆಯಂತೆ, ಪ್ರಸ್ತಾವನೆಯನ್ನು ಜು.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆದೇಶಕ್ಕೆ ಮಂಡಿಸಲಾಗಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ರಾಜ್ಯಾದ್ಯಂತ ಆಚರಿಸುತ್ತಿರುವ ಹಝ್ರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪಿ.ಎಸ್.ಮಾಲತಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರಕಾರದಿಂದ ಟಿಪ್ಪುಜಯಂತಿ ಆಚರಿಸಿದರೆ ಗಲಾಟೆ, ಸಾವು, ನೋವು ಸಂಭವಿಸುತ್ತದೆ ಎಂದು ಕೆಲವು ಶಾಸಕರು ಪತ್ರ ಬರೆದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಲಾಗಿದೆ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ