ಐಎಎಂ ಸಂಸ್ಥಾಪಕ ಮನ್ಸೂರ್ ಖಾನ್ ಆಸ್ಪತ್ರೆಗೆ ದಾಖಲು
Update: 2019-08-02 09:05 GMT
ಬೆಂಗಳೂರು, ಆ.2: ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಗುರುವಾರ ರಾತ್ರಿ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆನೋವಿದ್ದ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಮನ್ಸೂರ್ ಖಾನ್ ಪರ ವಕೀಲ ಗುರುವಾರ ನ್ಯಾಯಾಲಯದಲ್ಲಿ ವಾದಿಸಿದ್ದರು. ಆದರೆ ಇದಕ್ಕೆ ಎಸ್ಐಟಿ, ಇ.ಡಿ. ಪರ ವಕೀಲರು ಆಕ್ಷೇಪಿಸಿದ್ದರು. ಅಂತಿಮವಾಗಿ ಜಯದೇವ ಆಸ್ಪತ್ರೆಯಲ್ಲಿ ಮನ್ಸೂರ್ಗೆ ಚಿಕಿತ್ಸೆಗೆ ಅವಕಾಶ ನೀಡಿ ನ್ಯಾಯಾಲಯ ಆದೇಶಿಸಿತ್ತು. ಬಳಿಕ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಮನ್ಸೂರ್ ಖಾನ್ ನನ್ನು ಎದೆನೋವಿನ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.