ಮಲೆನಾಡಿನಲ್ಲಿ ಮುಂದುವರೆದ ಮಳೆ ಆರ್ಭಟ: ಅಲ್ಲಲ್ಲಿ ಗೋಡೆ, ಧರೆ ಕುಸಿತ- ನೆಲಕ್ಕುರುಳಿದ ವಿದ್ಯುತ್ ಕಂಬಗಳು

Update: 2019-08-05 16:42 GMT

ಚಿಕ್ಕಮಗಳೂರು, ಆ.5: ಜಿಲ್ಲೆಯ ಮಲೆನಾಡು ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಸುರಿಯಲಾರಂಭಿಸಿದ್ದ ಧಾರಾಕಾರ ಮಳೆ ಸೋಮವಾರವೂ ಮುಂದುವರೆದಿದ್ದು, ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ವಿವಿಧೆಡೆ ಧರೆ ಕುಸಿತ, ಮನೆಗಳ ಗೋಡೆ ಕುಸಿತದಂತಹ ಘಟನೆಗಳು ಸಂಭವಿಸುತ್ತಿದ್ದು, ಮೂಡಿಗೆರೆ ತಾಲೂಕಿನಲ್ಲಿ ಸತತವಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಶಾಲೆ ಕಾಲೇಜಿಗೆ ರಜೆ ಘೋಷಿಸಲಾಗಿತ್ತು.

ಮೂಡಿಗೆರೆ ತಾಲೂಕಿನಲ್ಲಿ ಶುಕ್ರವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿ ರಸ್ತೆಯ ಆಲೆಖಾನ್ ಬಳಿ ಶನಿವಾರ ಗುಡ್ಡ ಕುಸಿದ್ದು ಆಲೆಕಾನ್ ಸಂಪರ್ಕ ರಸ್ತೆ ಬಂದ್ ಆಗಿತ್ತು. ರವಿವಾರ ಈ ರಸ್ತೆಯಲ್ಲಿದ್ದ ಕಲ್ಲುಮಣ್ಣನ್ನು ತೆರವುಗೊಳಿಸಲಾಗಿದ್ದು, ಸೋಮಗುಡ್ಡ ಇದೇ ಜಾಗದಲ್ಲಿ ಮತ್ತೆ ಗುಡ್ಡ ಕುಸಿದು ಆಲೆಕಾನ್ ಸಂಪರ್ಕ ರಸ್ತೆ ಮತ್ತೆ ಬಂದ್ ಆಗಿತ್ತು. ತಾಲೂಕಿನಾದ್ಯಂತ ಮಳೆಯ ಜೊತೆಗೆ ರಭಸವಾಗಿ ಗಾಳಿ ಬೀಸುತ್ತಿರುವುದರಿಂದ ಗೋಣಿಬೀಡು, ಕಿರುಗುಂದ, ಜನ್ನಾಪುರ ಮತ್ತಿತರ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ರವಿವಾರ ರಾತ್ರಿ ಸುರಿದ್ದ ಮಳೆಗೆ ಮೂಡಿಗೆರೆ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಲೋಕೇಶ್ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಸುಮಾರು 30 ಸಾವಿರ ರೂ. ನಷ್ಟ ಸಂಂಭವಿಸಿದೆ. ಘಟನೆ ವೇಳೆ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಮೂಡಿಗೆರೆ ತಾಲೂಕಿನ ಕಳಸ, ಕುದುರೆಮುಖ, ಸಂಸೆ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಈ ಭಾಗದಲ್ಲಿ ಹರಿಯುವ ಭದ್ರಾ ನದಿ ತುಂಬಿ ಹರಿಯುತ್ತಿದ್ದು, ಮಳೆ ಮುಂದುವರಿದಲ್ಲಿ ಕಳಸ-ಹೊರನಾಡು ಸಂಪರ್ಕ ಸೇತುವೆ ಮಂಗಳವಾರ ಸಂಜೆ ವೇಳೆಗೆ ಮುಳುಗಡೆಯಾಗಲಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಲೇ ಇರುವ ಪರಿಣಾಮ ನದಿ ತೀರದ ಗ್ರಾಮಗಳ ಜನರಿಗೆ ಕಂದಾಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ

ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲೂ ರವಿವಾರ ರಾತ್ರಿಯಿಂದಲೂ ಮಳೆಯಾಗುತ್ತಿದೆ. ಜೀವಕಳೆ ಕಳೆದುಕೊಂಡಿದ್ದ ತುಂಗಾ, ಭದ್ರಾ, ಹೇಮಾವತಿ ನದಿಗಳು ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪ ತಾಲೂಕಿನ ಬಸರಿಕಟ್ಟೆ, ಜಯಪುರ, ಕೊಗ್ರೆ, ಬಿಜಿ ಕಟ್ಟೆ, ಎತ್ತಿನಹಟ್ಟಿ, ಅಗಳಗಂಡಿ, ಲೋಕನಾಥಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತಾಲೂಕಿನ ಕಗ್ಗ ಗ್ರಾಮದಲ್ಲಿ ತುಂಗಾ ನದಿಯ ಉಪನದಿಯೊಂದರಲ್ಲಿ ಸತತ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಪರಿಣಾಮ ನದಿ ನೀರು ಭತ್ತದ ಗದ್ದೆಗಳಿಗೆ ನುಗ್ಗಿರುವ ಬಗ್ಗೆ ವರದಿಯಾಗಿದೆ.

ಮೂಡಿಗೆರೆ ತಾಲೂಕಿನಾದ್ಯಂತ ಕಳೆದರೆಡು ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಚಾರ್ಮಾಡಿಘಾಟಿ ರಸ್ತೆಯ ಆಲೆಖಾನ್ ಬಳಿ ಗುಡ್ಡ ಕುಸಿದು ಕಲ್ಲುಮಣ್ಣು ರಸ್ತೆ ಮೇಲೆ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಗ್ರಾಮಸ್ಥರು ರಸ್ತೆಮೇಲೆ ಬಿದ್ದ ಕಲ್ಲುಮಣ್ಣು ತೆರವುಗೊಳಿಸಿದ ನಂತರ ಪುನಃ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಳೆಯ ಜೊತೆಗೆ ಬಾರಿ ಗಾಳಿ ಬೀಸುತ್ತಿರುವುದರಿಂದ ಗೋಣಿಬೀಡು, ಜನ್ನಾಪುರ, ಕಿರಗುಂದ, ಕಣಚೂರು ಗ್ರಾಮಗಳ ಬಳಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸುತ್ತಮುತ್ತ ಭಾನುವಾರ ಸಂಜೆಯಿಂದ ಸಾಧಾರಣ ಮಳೆಯಾಗುತ್ತಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ರವಿವಾರದಿಂದ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಚಿಕ್ಕಮಗಳೂರು ಸಮೀಪದ ಮುಳ್ಳಯ್ಯನಗಿರಿ, ಬಾಬಾಬುಡನ್‍ಗಿರಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News