ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ : ಸಸಿಕಾಂತ್ ಸೆಂಥಿಲ್
ಕಂದಾಯ,ಮನಪಾ, ನಗರ ಯೋಜನೆ ಇಲಾಖಾಧಿಕಾರಿಗಳ ಸಮಿತಿ ರಚನೆ
ಮಂಗಳೂರು, ಆ.5: ನಗರದಲ್ಲಿ ಹಲವಾರು ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೆಲವು ಖಾಸಗಿ ವ್ಯಕ್ತಿಗಳ ಜಾಗದ ತಕರಾರಿನಿಂದ ಅಪೂರ್ಣಗೊಂಡಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ದೇಶಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸ್ಮಾರ್ಟ್ ಸಿಟಿ ಅಂತರ್ ಇಲಾಖಾ ಕ್ರಿಯಾಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ನಗರದ ಭವಿಷ್ಯದ ಹಿತದೃಷ್ಟಿಯಿಂದ ಪ್ರಮುಖ ರಸ್ತೆಗಳ ಅಗಲೀಕರಣವಾಗಬೇಕಿದೆ. ನಗರದಲ್ಲಿ ಹಲವು ಪ್ರಮುಖ ರಸ್ತೆಗಳ ಅಗಲೀಕರಣ, ಫುಟ್ಪಾತ್ ನಿರ್ಮಾಣ ಸಹಿತ ಅಭಿವೃದ್ಧಿ ಕಾಮಗಾರಿಗಳನ್ನು ಕೆಲವು ವರ್ಷಗಳ ಹಿಂದೆಯೇ ಕೈಗೆತ್ತಿಕೊಳ್ಳಲಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡಲು ಕೆಲವು ಖಾಸಗಿ ವ್ಯಕ್ತಿಗಳು ನಿರಾಕರಿಸಿರುವುದೇ ಇದಕ್ಕೆ ಕಾರಣವಾಗಿದೆ. ಆದಾಗ್ಯೂ ಮನಪಾ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಕಾರಣ ರಸ್ತೆ ಅಭಿವೃದ್ಧಿ ಅಪೂರ್ಣವಾಗಿ ಉಳಿಯುವಂತಾಗಿದೆ. ಸಾರ್ವಜನಿಕ ಉದ್ದೇಶಕ್ಕೆ ಜಾಗ ಪಡೆಯಲು ಭೂಸ್ವಾಧೀನ ಕಾಯ್ದೆಯಲ್ಲಿ ಅವಕಾಶ ಇದ್ದರೂ ಇದಕ್ಕೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಒಂದಿಬ್ಬರ ತಕರಾರಿಗೆ ಇಡೀ ರಸ್ತೆಯ ಅಭಿವೃದ್ಧಿಯನ್ನು ನಿಲ್ಲಿಸಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗ ಅಗತ್ಯವಿದ್ದಲ್ಲಿ ಭೂಮಾಲಕರಿಗೆ ಟಿ.ಡಿ.ಆರ್. ಒದಗಿಸುವ ಮೂಲಕ ಜಾಗ ಪಡೆಯಬೇಕು. ಇದಕ್ಕೆ ನಿರಾಕರಿಸಿದರೆ ಅಂತಹ ಜಾಗವನ್ನು ಭೂಸ್ವಾಧೀನ ಕಾಯ್ದೆಯಡಿ ವಶಪಡಿಸಲು ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮನಪಾ ಅಧಿಕಾರಿಗಳಿಗೆ ಸೂಚಿಸಿದರು.
ಜಾಗದ ತಕರಾರಿನಿಂದ ಅರ್ಧದಲ್ಲಿ ನಿಂತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಜಮೀನನ್ನು ಪಡೆಯಲು ಕಂದಾಯ ಇಲಾಖೆ, ಮಹಾ ನಗರಪಾಲಿಕೆ ಹಾಗೂ ನಗರ ಯೋಜನೆ ಇಲಾಖೆ ಅಧಿಕಾರಿಗಳ ಸಮಿತಿಯನ್ನು ರಚಿಸಿದ ಜಿಲ್ಲಾಧಿಕಾರಿ, ಕೂಡಲೇ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.
ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, ರಸ್ತೆ ಅಗಲೀಕರಣ ಸಂದರ್ಭ ಬಹುತೇಕ ಜಾಗದ ಮಾಲಕರು ಬಿಟ್ಟುಕೊಡಲು ಸಿದ್ದರಿರುತ್ತಾರೆ. ಕೆಲವು ಪ್ರಕರಣಗಳಲ್ಲಿ ಮಾತ್ರ ಇಂತಹ ಸಮಸ್ಯೆ ಇದೆ. ಟಿಡಿಆರ್ ಮೂಲಕ ಜಾಗ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಲುದಾರಿ : ನಗರದ ಟೌನ್ ಹಾಲ್ ಬಳಿ ಪಾದಚಾರಿಗಳಿಗೆ ರಸ್ತೆ ದಾಟಲು ಕೆಳ ಸೇತುವೆ ನಿರ್ಮಾಣ ಕಾಮಗಾರಿ ತ್ವರಿತಗೊಳಿಸಬೇಕು. ಇದಕ್ಕೆ ಹೆಚ್ಚುವರಿಯಾಗಿ ತಾಪಂ ಜಮೀನು ಪಡೆಯುವ ಸಂಬಂಧ ತಾಪಂ ಇಒ ಜೊತೆ ಶೀಘ್ರದಲ್ಲೇ ಚರ್ಚಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಪುರಭವನ ವೃತ್ತದಿಂದ ಆರ್ಟಿಒವರೆಗೆ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಪರಿವರ್ತಿಸುವ ಬಗ್ಗೆ ಪುನಃ ಅಧ್ಯಯನ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಲಾಲ್ಬಾಗ್ ವೃತ್ತದ ಅಭಿವೃದ್ಧಿಯನ್ನು ರಸ್ತೆ ಸಂಚಾರದ ಮಾರ್ಗದರ್ಶಿಯಂತೆ ಕೈಗೆತ್ತಿಕೊಳ್ಳಲು ಹಾಗೂ ಲೇಡಿಹಿಲ್ ವೃತ್ತ ಅಭಿವೃದ್ಧಿಯನ್ನು ವಿಳಂವವಿಲ್ಲದೆ ಮತ್ತು ಓಲ್ಡ್ಕೆಂಟ್ ರಸ್ತೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ರೈಲ್ವೆ ಇಲಾಖೆಯ ಜಮೀನಿನಿಂದಾಗಿ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿ, ಸ್ಮಾರ್ಟ್ ರಸ್ತೆ ಹಾಗೂ ಡ್ರೈನೇಜ್ ವ್ಯವಸ್ಥೆಗಳ ಕಾಮಗಾರಿಗಳನ್ನು ಮುಂದುವರಿಸಲು ಈ ವಾರದಲ್ಲೇ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಂಗರಗುಂಡಿ, ಕುಡುಂಬೂರು ಡ್ರೈನೇಜ್ ಸಮಸ್ಯೆ: ಬೈಕಂಪಾಡಿಯ ಅಂಗರಗುಂಡಿ ಹಾಗೂ ಕುಡುಂಬೂರು ಪ್ರದೇಶಕ್ಕೆ ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಕೆಯುಐಡಿಎಫ್ಸಿ ಮೂಲಕ ನಡೆಸಲಾಗುತ್ತದೆ. ಇದಕ್ಕಾಗಿ ವೆಟ್ವೆಲ್ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕ ರ್ನಿುಸಲು ಕೆಐಎಡಿಬಿ ವಶದಲ್ಲಿರುವ ಭೂಮಿ ಅಗತ್ಯವಿದೆ. ಈಗಾಗಲೇ ಜಮೀನು ಪಡೆಯುವ ಸಂಬಂಧ ಕೆಐಎಡಿಬಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ನಗರದ ಹಲವೆಡೆ ಸಾರ್ವಜನಿಕ ಕಾಮಗಾರಿಗಳನ್ನು ನಡೆಸುವಾಗ ಗುತ್ತಿಗೆದಾರರು ಯಾವುದೇ ರೀತಿಯ ಸುರಕ್ಷತಾ ವ್ಯವಸ್ಥೆ ಅಳವಡಿಸದೆ ಮನ ಬಂದಂತೆ ಕಾಮಗಾರಿಗಳನ್ನು ನಡೆಸುತ್ತಿರುವುದು ಕಂಡು ಬರುತ್ತಿದೆ. ಕಾಮಗಾರಿ ಸ್ಥಳದಲ್ಲಿ ಅಗತ್ಯ ಬ್ಯಾರಿಕೇಡ್, ಬೋರ್ಡ್ ಮತ್ತು ರಿಫ್ಲೆಕ್ಟರ್ ಗಳನ್ನು ಅಳವಡಿಸಬೇಕು. ತಪ್ಪಿದಲ್ಲಿ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ನಾರಾಯಣಪ್ಪ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.