ಸಾಲಿಗ್ರಾಮ ದೇವಳದ ಕೆರೆಗೆ ಬಿದ್ದು ಯುವಕ ಮೃತ್ಯು
Update: 2019-08-05 17:10 GMT
ಕೋಟ, ಆ.5: ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸಾಲಿಗ್ರಾಮ ಕಾರ್ಕಡ ನಿವಾಸಿ ವಿಶ್ವನಾಥ ಗಾಣಿಗ ಎಂಬವರ ಮಗ ವಿನೋದ್(28) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಇವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಈಜಲು ಬಾರದ ಕಾರಣ ನಾಪತ್ತೆಯಾಗಿದ್ದರೆನ್ನಲಾಗಿದೆ.
ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಮಧ್ಯಾಹ್ನ ವೇಳೆ ಮೃತದೇಹ ಕೆರೆಯಲ್ಲಿ ಪತ್ತೆಯಾಯಿತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.