‘ಮೇಕೆದಾಟು ಯೋಜನೆ’ ಮರುಪರಿಶೀಲನೆಗೆ ಕೇಂದ್ರದ ಸೂಚನೆ ರಾಜಕೀಯ ದುರುದ್ದೇಶ: ಡಿಕೆಶಿ ಆಕ್ರೋಶ

Update: 2019-08-08 13:27 GMT

ಬೆಂಗಳೂರು, ಆ. 8: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಗೆ ಈಗಾಗಲೇ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ, ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಈಗಾಗಲೇ ಡಿಪಿಆರ್ ಸಲ್ಲಿಸಲಾಗಿದೆ. ಯೋಜನೆ ಅನುಷ್ಠಾನ ಅಂತಿಮ ಹಂತದಲ್ಲಿರುವಾಗ ಮರುಪರಿಶೀಲನೆ ಮಾಡುವಂತೆ ಕೇಂದ್ರವು ಸೂಚಿಸಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ ಎಂದು ಅವರು ಆಪಾದಿಸಿದ್ದಾರೆ.

ಮೇಕೆದಾಟು ಯೋಜನೆ ಸಮತೋಲನ ಅಣೆಕಟ್ಟೆ ಯೋಜನೆ ಇವತ್ತು-ನಿನ್ನೆ ರೂಪಿತವಾದುದಲ್ಲ. 40 ವರ್ಷಗಳ ಹಿಂದೆಯೇ ರಾಜ್ಯ ಸರಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೂ ಅನುಕೂಲವಾಗುವ ಯೋಜನೆಗೆ ಈಗಾಗಲೇ ಸ್ಥಳ ಗುರುತಿಸಲಾಗಿದೆ. ವಿನಾಕಾರಣ ಸಮುದ್ರದ ಪಾಲಾಗಲಿರುವ ನೀರನ್ನು ಯೋಜಿತ ಅಣೆಕಟ್ಟೆಯಲ್ಲಿ ಸಂಗ್ರಹಿಸಿಟ್ಟುಕೊಂಡು ವಿದ್ಯುತ್ ಉತ್ಪಾದನೆ, ಸ್ವಲ್ಪ ಪ್ರಮಾಣದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶವನ್ನು ಹೊಂದಲಾಗಿದೆ.

ಕಾವೇರಿ ನ್ಯಾಯಾಧೀಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರಿನ ಪರಿಮಿತಿಯಲ್ಲೇ ಯೋಜನೆ ರೂಪಿಸಲಾಗಿದೆ. ಹೀಗಿರುವಾಗ ಏಕಾಏಕಿ ಯೋಜನೆ ಮರುಪರಿಶೀಲನೆಗೆ ಸೂಚನೆ ನೀಡಿರುವುದು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಆಕ್ಷೇಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಈ ಯೋಜನೆ ರದ್ದುಪಡಿಸಲಾಗಲಿ, ಸ್ಥಳಾಂತರ ಮಾಡಲಾಗಲಿ ಅವಕಾಶ ನೀಡುವುದಿಲ್ಲ. ಪಕ್ಷಭೇದ ಮರೆತು ಎಲ್ಲ ಸಂಸದರು ಹಾಗೂ ಶಾಸಕರು ಹೋರಾಟಕ್ಕೆ ಅಣಿಯಾಗಬೇಕಿದೆ. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಮೊದಲು ನಿರ್ಣಯ ಆಗಿರುವಂತೆ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಶಿವಕುಮಾರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News