ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Update: 2019-08-08 17:52 GMT

ಶಿವಮೊಗ್ಗ, ಆ. 8: ಜಿಲ್ಲೆಯ ಹಲವು ಕಡೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಿವಕುಮಾರ್ ಅವರು ತಿಳಿಸಿದರು.

ಗುರುವಾರ ನಗರದ ಡಿ.ಸಿ.ಕಚೇರಿಯಲ್ಲಿ ಜಿಲ್ಲಾ ನೋಡಲ್ ಕಾರ್ಯದರ್ಶಿ ಮಣಿವಣ್ಣನ್ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಆಡಳಿತ ಯಂತ್ರ ಸಜ್ಜಾಗಿದ್ದು, ಯಾವುದೇ ತೊಂದರೆ ಉಂಟಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಅತಿ ಮಳೆಯಿಂದಾಗಿ ಜಿಲ್ಲೆಯಲ್ಲಿ 2 ಜೀವ ಹಾನಿ ಸಂಭವಿಸಿದ್ದು, 9 ಜಾನುವಾರುಗಳು ಸಾವನ್ನಪ್ಪಿವೆ. 201 ವನೆಗಳು ಭಾಗಶಃ ಹಾನಿಗೀಡಾಗಿವೆ. ಸುಮಾರು 7748 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಜಮೀನಿಗೆ ನೀರು ನುಗ್ಗಿ ಹಾನಿ ಉಂಟಾಗಿದೆ. ಜೀವ ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಲಾಗುತ್ತಿದ್ದು, ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿ ಆದಷ್ಟು ಬೇಗನೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದರು.

ಕಂಟ್ರೋಲ್ ರೂಂ: ನೆರೆ ಪರಿಸ್ಥಿತಿ ಬಗ್ಗೆ ದಿನದ 24ಗಂಟೆ ನಿಗಾ ಇರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರನ್ನು ಮೇಲುಸ್ತುವಾರಿಗೆ ನಿಯೋಜಿಸಲಾಗಿದೆ. ದೂರವಾಣಿ ಸಂಖ್ಯೆ 1077 ಮಾತ್ರವಲ್ಲದೆ, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ವಾಟ್ಸಾಪ್ ಮೊಬೈಲ್ ಸಂಖ್ಯೆ 8296283691 ಇದ್ದು, ಸಾರ್ವಜನಿಕರು ನೆರೆ ಹಾವಳಿ ಸಂಬಂಧಿಸಿದಂತೆ ಛಾಯಾಚಿತ್ರ, ವಿಡಿಯೋಗಳನ್ನು ಇದರಲ್ಲಿ ಅಪ್‍ಲೋಡ್ ಮಾಡಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ ಎಂದರು.

ಮಣಿವಣ್ಣನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಧ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಜಿಲ್ಲಾಡಳಿತದ ವತಿಯಿಂದ ತಕ್ಷಣ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮಳೆ ಒಂದೆರಡು ದಿನ ಮುಂದುವರೆದರೆ ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಹಾಯಕ್ಕೆ ಸಜ್ಜಾಗಿರುವಂತೆ ಎನ್‍ಡಿಆರ್‍ಎಫ್ ತಂಡಕ್ಕೆ ಮನವಿ ಮಾಡಲಾಗಿದೆ. ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ಸಂಪರ್ಕ ವ್ಯವಸ್ಥೆಯನ್ನು ಉತ್ತಮಪಡಿಸಲಾಗಿದ್ದು, ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ. ಈ ಗ್ರೂಪ್ ಮೂಲಕ ಸಮಸ್ಯೆಗಳನ್ನು ತಕ್ಷಣ ನಿರ್ವಹಿಸಲು ಸೂಚನೆ ನೀಡಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿದೆ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸುಲಭ ಸಂಪರ್ಕ ಸಾಧಿಸಲು ಸಾಧ್ಯವಾಗುವಂತೆ ಎಲ್ಲಾ ಅದಿಕಾರಿಗಳಿಗೆ ಟ್ವಿಟ್ಟರ್ ಖಾತೆ ತೆರೆಯಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಾನಿಗೀಡಾದ ವಿದ್ಯುತ್ ಸಂಪರ್ಕ ಪುನರ್ ಕಲ್ಪಿಸಲು ಆದ್ಯತೆ ನೀಡಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಮೂರು ಪ್ರವಾಹ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿ ಉತ್ತಮ ಊಟ ಉಪಾಹಾರ ಇತ್ಯಾದಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗಿದೆ. 
ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್, ಎಎಸ್ಪಿ ಎಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News