ಶ್ರೀನಗರದ ಸೂಕ್ಷ್ಮ ಪ್ರದೇಶಗಳಿಗೆ ಎನ್‌ಎಸ್‌ಎ ದೋವಲ್ ಭೇಟಿ

Update: 2019-08-09 14:32 GMT

ಶ್ರೀನಗರ,ಆ.9: ಮಂಗಳವಾರದಿಂದ ಇಲ್ಲಿ ಮೊಕ್ಕಾಂ ಹೂಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ ದೋವಲ್ ಅವರು ಶುಕ್ರವಾರ ನಗರದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳು ಮತ್ತು ಭದ್ರತಾ ಸಿಬ್ಬಂದಿ ಜೊತೆಗೆ ಮಾತುಕತೆಗಳನ್ನು ನಡೆಸಿದರು.

ಈದ್ಗಾ ಬಡಾವಣೆಗೆ ಭೇಟಿ ನೀಡಿದ ದೋವಲ್ ಹಲವಾರು ಸ್ಥಳಗಳಲ್ಲಿ ವಾಹನ ನಿಲ್ಲಿಸಿ ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ಅವರ ಸಹಾಯಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಜೊತೆಯಲ್ಲಿದ್ದರು. ಬಳಿಕ ಪೊಲೀಸ್ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಗಳನ್ನೂ ಭೇಟಿಯಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಲ್ಲಿ ಅವರ ಪಾತ್ರಕ್ಕಾಗಿ ಆಭಾರ ಸಲ್ಲಿಸಿದರು.

ವಿಧಿ 370ನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿರುವ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ಕಿರುಕುಳಗಳನ್ನು ನೀಡದಂತೆ ದೋವಲ್ ಅವರು ಜಮ್ಮು-ಕಾಶ್ಮೀರದಲ್ಲಿ ನಿಯೋಜಿತ ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News