ಈ ಬಾರಿ ಜಿಲ್ಲೆಗಳಲ್ಲಿ ಧ್ವಜಾರೋಹಣಕ್ಕೆ ಸಚಿವರೇ ಇಲ್ಲ: ಡಿ.ಕೆ.ಶಿವಕುಮಾರ್

Update: 2019-08-13 13:15 GMT

ಬೆಳಗಾವಿ, ಆ.13: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತುರದಲ್ಲಿ ಅಧಿಕಾರ ವಹಿಸಿಕೊಂಡರು. ಈಗ ಸ್ವಾತಂತ್ರ ದಿನಾಚರಣೆಯೆಂದು ಆಯಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರು ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಲಕ್ಷಾಂತರ ಜನರು ತತ್ತರಿಸಿರುವ ಈ ಸಂದರ್ಭದಲ್ಲಿ ರಾಜಕಾರಣ ಮಾಡಲು ಹೋಗುವುದಿಲ್ಲ. ಆದರೆ, ಸಚಿವ ಸಂಪುಟ ರಚನೆಯಾಗದಿರುವುದರಿಂದ ಹಲವಾರು ಸಮಸ್ಯೆಗಳು ತಲೆದೋರಿವೆ ಎಂದು ಅವರು ಹೇಳಿದರು.

ಪುನರ್ವಸತಿಗೆ ಸಂಬಂಧಿಸಿದಂತೆ ಎಲ್ಲರೂ ಒಗ್ಗಟ್ಟಿನಿಂದ ಸರಕಾರದ ಪರವಾಗಿ ನಿಲ್ಲುತ್ತೇವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸಂಭವಿಸಿರುವ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕಿದೆ ಎಂದು ಅವರು ಹೇಳಿದರು.

ವಿರೋಧ ಪಕ್ಷದಲ್ಲಿರುವ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರ ನಿಧಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇವೆ. ನನ್ನ ನಿಧಿಯಿಂದ 50ಲಕ್ಷ ರೂ.ತೆಗೆದುಕೊಳ್ಳುವಂತೆ ಪತ್ರ ಬರೆಯುತ್ತೇನೆ. ಹಾಗೂ ವೈಯಕ್ತಿಕವಾಗಿಯೂ ನೆರವಾಗುತ್ತೇನೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News