ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರಿಂದ ಸಿಎಂ ಪರಿಹಾರ ನಿಧಿಗೆ 1ಕೋಟಿ ರೂ.ನೆರವು

Update: 2019-08-13 15:24 GMT

ಬೆಂಗಳೂರು, ಆ. 13: ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಜನರ ನೆರವಿಗೆ ಧಾವಿಸಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆಸ್ತಿ-ಪಾಸ್ತಿ ಕಳೆದುಕೊಂಡು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ಎಂಟಿಬಿ ಸಂಸ್ಥೆಯಿಂದ 1 ಕೋಟಿ ರೂ.ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಕಷ್ಟದಲ್ಲಿರುವ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ನೆರವು ನೀಡುವಂತೆ ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅವರ ಮನವಿಗೆ ನಾವು ಸ್ಪಂದಿಸಿ ನಮ್ಮ ಸಂಸ್ಥೆಯಿಂದ ಈ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡುತ್ತಿದ್ದೇವೆ ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.

1 ಕೋಟಿ ರೂ.ಮೊತ್ತದ ಚೆಕ್ ಅನ್ನು ನಾಳೆ(ಆ.14) ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹಸ್ತಾಂತರ ಮಾಡಲಾಗುವುದು ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಿಳಿಸಿದ್ದು, ತಮ್ಮ ಪುತ್ರನೊಂದಿಗೆ ಚೆಕ್ ಹಿಡಿದಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News