ಮಹಾಮಳೆ ಹಾನಿ: ಕೊಡಗಿನ 7873 ಮಂದಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ

Update: 2019-08-13 17:43 GMT

ಮಡಿಕೇರಿ, ಆ.11 :ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸಂಕಷ್ಟ ಎದುರಾಗಿತ್ತು. ಸದ್ಯ ಲಭ್ಯವಾಗಿರುವ ಮಾಹಿತಿಯಂತೆ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ 147 ಮನೆಗಳು ಭಾಗಶಃ ಹಾನಿಯಾಗಿದ್ದು, 90 ಮನೆಗಳು ಪೂರ್ಣ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕು 32, ವಿರಾಜಪೇಟೆ 42, ಸೋಮವಾರಪೇಟೆ 73 ಮನೆಗಳು ಭಾಗಶಃ ಹಾನಿಯಾಗಿದ್ದು, ಮಡಿಕೇರಿ ತಾ. 15, ವಿರಾಜಪೇಟೆ 41 ಮತ್ತು ಸೋಮವಾರಪೇಟೆಯಲ್ಲಿ 34 ಮನೆಗಳು ಪೂರ್ಣ ಹಾನಿಯಾಗಿವೆ.
ಜಿಲ್ಲೆಯಲ್ಲಿ ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 30, ವಿರಾಜಪೇಟೆ ತಾಲ್ಲೂಕಿನಲ್ಲಿ 32, ಸೋಮವಾರಪೇಟೆ ತಾಲ್ಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಪ್ರವಾಹ ಪೀಡಿತ ಪ್ರದೇಶಗಳಾಗಿವೆ.

ಈವರೆಗೆ ಜಿಲ್ಲೆಯಲ್ಲಿ ಸುಮಾರು 1507 ಕ್ಕೂ ಹೆಚ್ಚು ಜನರು ಹಾಗೂ 19 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ಎನ್‍ಡಿಆರ್‍ಎಫ್, ಭಾರತೀಯ ಸೇನೆ, ಪೊಲೀಸ್ ಇಲಾಖೆ, ಕಂದಾಯ, ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆ ಸಹಕಾರದಲ್ಲಿ ರಕ್ಷಣೆ ಮಾಡಲಾಗಿದೆ.  

ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರ ತೆರೆಯಲಾಗಿದ್ದು, 2270 ಕುಟುಂಬಗಳ 7873 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಹಾಗೂ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸರಿಪಡಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆದಿದೆ.

ಅತೀವೃಷ್ಟಿಯಿಂದಾಗಬಹುದಾದ ತೊಂದರೆಯನ್ನು ಎದುರಿಸಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. 
ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಜರಿದು ರಸ್ತೆ ಸಂಚಾರಕ್ಕೆ ಅಡಚಣೆ ಮತ್ತು ಮರ ಬಿದ್ದು ಅಡಚಣೆ ಉಂಟಾಗಿದ್ದು, ತುರ್ತು ಕ್ರಮ ವಹಿಸಬಹುದಾದ ಕಡೆಗಳಲ್ಲಿ ಸಂಬಂಧಪಟ್ಟ ಇಲಾಖೆಗಳಿಂದ ಕ್ರಮವಹಿಸಲಾಗಿದೆ. 

ಜಿಲ್ಲೆಯ ಒಟ್ಟು 6 ರಸ್ತೆಗಳು ಭೂಕುಸಿತ ಹಾಗೂ ಪ್ರವಾಹದಿಂದ ಬಂದ್ ಆಗಿವೆ. ಮಡಿಕೇರಿ-ವಿರಾಜಪೇಟೆ, ಸಿದ್ದಾಪುರ-ಕರಡಿಗೋಡು, ಮಡಿಕೇರಿ-ವಿರಾಜಪೇಟೆ-ಮಾಕುಟ್ಟ, ಮೂರ್ನಾಡು-ನಾಪೋಕ್ಲು, ಸಿದ್ದಾಪುರ-ಕೊಂಡಂಗೇರಿ, ಗಾಳಿಬೀಡು-ಪಾಟಿ-ಕಾಲೂರು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. 

ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಮೊಕ್ಕಾಂ ಹೂಡಿದ್ದು, ತುರ್ತು ಸಂದರ್ಭಗಳಲ್ಲಿ ನೆರವಿಗೆ ಬರಲಿದೆ. ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ದಿನದ 24 ಗಂಟೆ ಅವಧಿಯಲ್ಲಿ ನಿಯಂತ್ರಣಾ ಕೊಠಡಿಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ವಾಟ್ಸಪ್‍ನಲ್ಲಿಯೂ ಸಹ ಪ್ರಕೃತಿ ವಿಕೋಪ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಾಗುತ್ತಿದ್ದು, ತುರ್ತು ಕ್ರಮ ವಹಿಸಲಾಗುತ್ತದೆ. 

ಈ ಸಂಬಂಧ ಸಾರ್ವಜನಿಕರು ಜಿಲ್ಲಾಧಿಕಾರಿಯವರ ನಿಯಂತ್ರಣ ಕೊಠಡಿ ಸಂಖ್ಯೆ: 08272-221077, 8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News