ಉಡುಪಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ: ಪ್ರಮುಖ ಸ್ಥಳಗಳಲ್ಲಿ ಭದ್ರತೆ
Update: 2019-08-17 16:23 GMT
ಉಡುಪಿ, ಆ.17: ಕೇಂದ್ರ ಗುಪ್ತಚಾರ ದಳದ ಮಾಹಿತಿಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಟ್ಟೆಚರ ವಹಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಹಾಗೂ ತಪಾಸಣೆಗಳನ್ನು ನಡೆಸಲಾಗುತ್ತಿದೆ.
ಜಿಲ್ಲೆಯ ಮಾಲ್, ಬಂದರು, ದೇವಸ್ಥಾನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಈ ಸಂಬಂಧ ಪೊಲೀಸರು ತಪಾಸಣಾ ಕಾರ್ಯದಲ್ಲೂ ತೊಡಗಿಸಿದ್ದಾರೆ. ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಸ್ತು ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ.
ಕೊಲ್ಲೂರು ಶ್ರೀಮೂಕಾಂಬಿಕಾ, ಉಡುಪಿ ಶ್ರೀಕೃಷ್ಣ ಮಠ, ಮಲ್ಪೆ ಬಂದರು, ಗಂಗೊಳ್ಳಿ ಬಂದರುಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಜಿಲ್ಲೆಯ ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಜಿಲ್ಲೆಯ ವಿದ್ವಂಸಕ ಕೃತ್ಯ ಪತ್ತೆ ದಳ ಬೆಳಗ್ಗೆ ಮತ್ತು ಸಂಜೆ ವೇಳೆ ತಪಾಸಣೆ ಕಾರ್ಯ ನಡೆಸುತ್ತಿದೆ.
ಆ.16ರಿಂದ ಆರಂಭಗೊಂಡಿರುವ ಈ ತಪಾಸಣಾ ಕಾರ್ಯಾಚರಣೆ ಮುಂದಿನ ಆದೇಶ ಬರುವವರೆಗೆ ಮುಂದುವರೆಯಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.