ಮಂಗಳೂರು: ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ ಗೆ ಲಾರಿ ಢಿಕ್ಕಿ- ವಿದ್ಯಾರ್ಥಿಗಳಿಗೆ ಗಾಯ

Update: 2019-08-21 11:58 GMT

ಮಂಗಳೂರು: ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಘಟನೆ ಹೊಸಬೆಟ್ಟು ತಿರುವಿನಲ್ಲಿ ಬುಧವಾರ ನಡೆದಿದೆ.

ಅಪಘಾತದಿಂದ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಶಾಲಾ ಮಕ್ಕಳನ್ನು ಕರೆ ತರಲು ತೆರಳುತ್ತಿದ್ದ ಮಿನಿ ಬಸ್ ಹೊಸಬೆಟ್ಟು ಬಳಿ ಮುಖ್ಯ ರಸ್ತೆಯಿಂದ ಒಳರಸ್ತೆಗೆ ತಿರುಗುವ ಸಂದರ್ಭ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿ ನೇರವಾಗಿ ಬಂದು ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಢಿಕ್ಕಿ ಹೊಡೆದ ಪರಿಣಾಮ ಪಕ್ಕದಲ್ಲೇ ಇದ್ದ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಬಸ್ ಒರಗಿ ನಿಂತಿದ್ದು, ಕಂಬ ಮುರಿದು ಬೀಳುತ್ತಿದ್ದರೆ ಇನ್ನಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅಪಘಾತದಿಂದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News