ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಿ: ನೂತನ ಸಚಿವ ಲಕ್ಷ್ಮಣ ಸವದಿ

Update: 2019-08-21 14:41 GMT

ಬೆಳಗಾವಿ, ಆ.21: ಪ್ರವಾಹ ಬಾಧಿತ ಗ್ರಾಮಗಳಲ್ಲಿ ಮಳೆಯಿಂದ ಸಂಪೂರ್ಣವಾಗಿ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಸರಕಾರಿ ಜಮೀನು ಲಭ್ಯವಿರುವ ಕಡೆ ಅಥವಾ ಜಮೀನು ಇಲ್ಲದಿದ್ದರೆ ಬಾಡಿಗೆ ಜಮೀನು ಪಡೆದುಕೊಂಡು ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸುವಂತೆ ನೂತನ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಪ್ರವಾಹ ನಿರ್ವಹಣೆ ಮತ್ತು ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಂತ ಶೆಡ್ ನಿರ್ಮಾಣಕ್ಕೆ ಮುಂದಾದರೆ ಸರಕಾರದಿಂದ ತಕ್ಷಣ 50 ಸಾವಿರ ರೂ.ನೀಡಬಹುದು ಎಂದರು.

ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ಆರಂಭಿಸಿರುವುದರಿಂದ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟರೆ, ಶಾಲೆಗಳನ್ನು ಪುನರಾರಂಭಿಸಲು ಅನುಕೂಲವಾಗಲಿದೆ. ಸರಕಾರ ಈಗಾಗಲೇ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ತಕ್ಷಣವೇ ಸಂತ್ರಸ್ತರಿಗೆ ತಲುಪಿಸಬೇಕು ಎಂದು ಸಚಿವ ಲಕ್ಷ್ಮಣ ಸವದಿ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆಹಾನಿ ಆಗಿರುವುದರಿಂದ ಕೂಡಲೇ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಿ. ಬಿತ್ತನೆ ಮತ್ತು ಬೆಳೆಯ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಸಮೀಕ್ಷೆ ನಡೆಸಬೇಕು. ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಸಮೀಕ್ಷೆ ನಡೆಸುವ ಮೂಲಕ ಸಂತ್ರಸ್ತರಿಗೆ ಸೂಕ್ತ ನೆರವು ಒದಗಿಸಬೇಕು ಎಂದು ಅವರು ಹೇಳಿದರು.

ಪ್ರವಾಹ ಬಾಧಿತ ಗ್ರಾಮಗಳಲ್ಲಿ ಮನೆಗಳ ಕುಸಿತದ ಬಗ್ಗೆ ಸಮೀಕ್ಷೆ ಮಾಡುವಾಗ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಲೋಪದೋಷಗಳಾದರೆ ಸಮೀಕ್ಷೆ ಮಾಡುವ ತಂಡವನ್ನೇ ಹೊಣೆಯಾಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಸಂತ್ರಸ್ತರ ಪುನರ್ವಸತಿ ಈಗ ನಮ್ಮ ಆದ್ಯತೆಯಾಗಿದೆ. ಮುಳುಗಡೆಯಾಗಿರುವ ಗ್ರಾಮಗಳಲ್ಲಿ ಜನರು ಸಂಪೂರ್ಣ ಸ್ಥಳಾಂತರಗೊಳ್ಳಲು ಇನ್ನೂ ಸಮಯ ಬೇಕಿದೆ. ಪುನರ್ವಸತಿ ಸರಕಾರ ಮತ್ತು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲು. ಆದುದರಿಂದ, ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದರು.

ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಯಾವುದೇ ರೋಗರುಜಿನಗಳು ಬಾರದಂತೆ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಮತ್ತು ರೈತರ ಜತೆ ಸರಕಾರ ಇದೆ ಎಂಬ ಭರವಸೆಯನ್ನು ನಾವು ಮೂಡಿಸಬೇಕಿದೆ. ರಸ್ತೆ, ಸೇತುವೆಗಳ ಹಾನಿಯ ಸಮೀಕ್ಷೆ ನಡೆಸಿ ದುರಸ್ತಿಗೆ ಅಂದಾಜುಪಟ್ಟಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಿ. ಅದೇ ರೀತಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಗ್ರಾಮಗಳಿಗೆ ತಕ್ಷಣವೇ ಸಂಪರ್ಕ ಒದಗಿಸುವಂತೆ ಲಕ್ಷ್ಮಣ ಸವದಿ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಸಚಿವೆ ಶಶಿಕಲಾ ಜೊಲ್ಲೆ, ಪ್ರವಾಹಬಾಧಿತ ಗ್ರಾಮಗಳಲ್ಲಿ ಜನರ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಸಂತ್ರಸ್ತರಿಗೆ ಹೊಸ ಬದುಕು ಕಟ್ಟಿಕೊಡಲು ನಾವು ಎಲ್ಲರೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇ.490ರಷ್ಟು ಅಧಿಕ ಮಳೆ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಪ್ರವಾಹ ಪರಿಸ್ಥಿತಿ ಉದ್ಭವಿಸಿತು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಜಿಲ್ಲೆಯ 377 ಗ್ರಾಮಗಳು ಪ್ರವಾಹದಿಂದ ಬಾಧಿತಗೊಂಡಿದ್ದು, 4.15 ಲಕ್ಷ ಜನರನ್ನು ಹಾಗೂ 1.10 ಲಕ್ಷ ಜಾನುವಾರುಗಳನ್ನು ಸ್ಥಳಾಂತರಿಸಲಾಗಿದೆ. 493 ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ 1.72 ಲಕ್ಷ ಜನರಿಗೆ ಆಶ್ರಯ ನೀಡಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ 126 ಪರಿಹಾರ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 2.34 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಜಲಾವೃತಗೊಂಡಿದೆ. ಪ್ರವಾಹ ಮತ್ತು ಮಳೆಯಿಂದಾಗಿ 24 ಜನರು ಸಾವನ್ನಪ್ಪಿದ್ದು, ಎರಡು ಪ್ರಕರಣ ಹೊರತುಪಡಿಸಿ ಮೃತರ ವಾರಸುದಾರರಿಗೆ ಪರಿಹಾರ ನೀಡಲಾಗಿದೆ. ಇಬ್ಬರು ನಾಪತ್ತೆಯಾಗಿದ್ದಾರೆ. ಇದುವರೆಗೆ 14 ಕೋಟಿ ರೂ.ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News