ಒಂದು ತಿಂಗಳಲ್ಲಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ: ಸಚಿವ ಸುರೇಶ್ ಕುಮಾರ್ ಭರವಸೆ

Update: 2019-08-22 18:16 GMT

ಮಡಿಕೇರಿ, ಆ.22: ಕಳೆದ ವರ್ಷದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿಯಲ್ಲಿ 35, ಜಂಬೂರಿನಲ್ಲಿ 350 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಸದ್ಯ ಕರ್ಣಂಗೇರಿಯಲ್ಲಿ ಮನೆಯ ಕಾಮಗಾರಿ ಪೂರ್ಣಗೊಂಡಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸಂತ್ರಸ್ತರಿಗೆ ಒಂದು ತಿಂಗಳಲ್ಲಿ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿ ಹಾಗೂ ಜಂಬೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳನ್ನು ಸಚಿವರು ಪರಿಶೀಲಿಸಿದರು. 

ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಂಬೂರಿನಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ 350 ಮನೆಗಳು ಹಾಗೂ ಇನ್‍ಪೋಸಿಸ್ ಸಂಸ್ಥೆಯಿಂದ 200 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಈಗಾಗಲೇ 50 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಹಾಗೆಯೇ 220 ಮನೆಗಳು ರೂಪ್ ಹಂತದಲ್ಲಿದೆ. ಚರಂಡಿ, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಮೂಲಸೌಲಭ್ಯ ಕಲ್ಪಿಸಿ ಶೀಘ್ರ ಮನೆಗಳನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಹೇಳಿದರು. ಮನೆಗಳ ಕಾಮಗಾರಿಯು ಗುಣಮಟ್ಟದಿಂದ ಕೂಡಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.  

ಪ್ರಸಕ್ತ ವರ್ಷದಲ್ಲಿ ತೋರ ಮತ್ತು ಕಾವೇರಿ ನದಿ ಪಾತ್ರದ ಕರಡಿಗೋಡು, ಕುಂಬಾರಗುಂಡಿ ಮತ್ತಿತರ ಕಡೆಗಳಲ್ಲಿ ಪ್ರವಾಹ ಉಂಟಾಗಿದ್ದು, ಈ ಗ್ರಾಮಗಳನ್ನು ಸ್ಥಳಾಂತರಿಸಬೇಕಿದೆ. ಈ ಸಂಬಂಧ ಗ್ರಾಮಸಭೆಯಲ್ಲಿ ತೀರ್ಮಾನಿಸಿ ವರದಿ ನೀಡುವಂತೆ ಗ್ರಾ.ಪಂ.ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಈ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಹೇಳಿದರು. 

ಈ ಗ್ರಾಮಗಳ ಜನರ ಪುನರ್ ವಸತಿ ಸಂಬಂಧ ಹತ್ತಿರದಲ್ಲಿ ಸರ್ಕಾರಿ ಜಾಗ ಗುರುತಿಸಲಾಗುವುದು. ಇಲ್ಲದಿದ್ದಲ್ಲಿ ಖಾಸಗಿಯವರು ಭೂಮಿ ನೀಡಲು ಮುಂದೆ ಬಂದಲ್ಲಿ ಖರೀದಿಸಲಾಗುವುದು. ಒಟ್ಟಾರೆ ಈ ಬಾರಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಪುನರ್ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ನುಡಿದರು.  

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಾಜ್ ಕುಮಾರ್ ಖತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಮಹೇಶ್, ಗೋವಿಂದ ರಾಜು, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ತಾ.ಪಂ.ಇಒ ಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮು, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್, ಇತರರು ಇದ್ದರು. 

ಬಸವನಹಳ್ಳಿಗೆ ಭೇಟಿ
ಸಚಿವ ಎಸ್.ಸುರೇಶ್ ಕುಮಾರ್ ಅವರು ಪ್ರಕೃತಿ ವಿಕೋಪದ ಪ್ರದೇಶಗಳ ವೀಕ್ಷಣೆ ಸಂದರ್ಭದಲ್ಲಿ ದಿಡ್ಡಳ್ಳಿ ಗಿರಿಜನರಿಗೆ ಹಸ್ತಾಂತರಿಸಲಾಗಿರುವ ಬಸವನಹಳ್ಳಿಯ ಮನೆಗಳನ್ನು ವೀಕ್ಷಣೆ ಮಾಡಿದರು. 

ಈ ಸಂದರ್ಭದಲ್ಲಿ ಬಸವನಹಳ್ಳಿಯ ಪ್ರಮುಖರಾದ ಸ್ವಾಮಿಯಪ್ಪ ಹಾಗೂ ಸ್ಥಳೀಯರ ಅಹವಾಲು ಆಲಿಸಿದರು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕಾಮಗಾರಿಗಳ ಬಗ್ಗೆ ಪರಿಶೀಲಿಸಿದರು. ಈಗಾಗಲೇ ಹಸ್ತಾಂತರಿಸಿರುವ ಮನೆಗಳಲ್ಲಿ ದಿಡ್ಡಳ್ಳಿ ಆದಿವಾಸಿಗಳು ವಾಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. 

ಹಾರಂಗಿ ಪರಿಶೀಲನೆ
ಬಳಿಕ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ಜಲಾಶಯದ ನೀರಿನ ಸಂಗ್ರಹಣಾ ಸಾಮಥ್ರ್ಯ ಹಾಗೂ ಜಲಾನಯನ ವ್ಯಾಪ್ತಿಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಹಾರಂಗಿ ಹಾಗೂ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಅಲ್ಲಿನ ಸ್ಥಳೀಯರ ಅಹವಾಲು ಆಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News