ಪತ್ನಿಯ ಹತ್ಯೆ ಪ್ರಕರಣ: ಆರೋಪಿ ಪತಿ ಬಂಧನ

Update: 2019-08-23 14:24 GMT

ಬೆಂಗಳೂರು, ಆ.23: ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಲೆಗೈದ ಪ್ರಕರಣ ಸಂಬಂಧ ಓರ್ವನನ್ನು ಇಲ್ಲಿನ ಮಾಗಡಿ ಠಾಣಾ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಮಾಗಡಿಯ ಹಾಲಶೆಟ್ಟಿಹಳ್ಳಿಯ ನಾಗರಾಜ್ ಬಂಧಿತ ಆರೋಪಿಯಾಗಿದ್ದು, ಈತನ ಪತ್ನಿ ಪೂರ್ಣಿಮಾ ಕೊಲೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

2018ರ ನವೆಂಬರ್‌ನಲ್ಲಿ ವಿವಾಹವಾಗಿದ್ದ ಪೂರ್ಣಿಮಾ ಹಾಗೂ ನಾಗರಾಜ್ ಆರಂಭದಲ್ಲಿ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದರು. ಆದರೆ, ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿದ ನಾಗರಾಜ್, ಆಕೆಗೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಇದೇ ವಿಚಾರವಾಗಿ ಆ.21ರಂದು ನಾಗರಾಜ್ ಪತ್ನಿಯ ಜೊತೆ ಜಗಳವಾಡಿ, ಹಲ್ಲೆ ನಡೆಸಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಕೋಪಗೊಂಡ ನಾಗರಾಜ್, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೂರ್ಣಿಮಾ ಅನ್ನು ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದ. ಈ ಬಗ್ಗೆ ಸ್ಥಳೀಯರ ಮಾಹಿತಿ ಆಧರಿಸಿ, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪೂರ್ಣಿಮಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಆರೋಪಿ ನಾಗರಾಜ್ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News