ರಾಜ್ಯದಲ್ಲಿ ಶವ ಸಂಸ್ಕಾರಕ್ಕೆ ಭೂಮಿ ಕೊರತೆ: 6 ತಿಂಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಹೈಕೋರ್ಟ್ ಆದೇಶ

Update: 2019-08-23 17:19 GMT

ಬೆಂಗಳೂರು, ಆ.23: ರಾಜ್ಯದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಇಲ್ಲದ ರಾಜ್ಯದ 6,053 ಕಂದಾಯ ಗ್ರಾಮಗಳು ಹಾಗೂ 218 ಪಟ್ಟಣಗಳಿಗೆ ಮುಂದಿನ ಆರು ತಿಂಗಳಲ್ಲಿ ಅಗತ್ಯ ಸ್ಮಶಾನ ಭೂಮಿ ಒದಗಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಈ ಕುರಿತು ಆರ್.ಟಿ. ನಗರದ ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠ ನಡೆಯಿತು. ಸರಕಾರವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಸುಮಾರು 11.79 ಲಕ್ಷ ಎಕರೆ ಸರಕಾರಿ ಭೂಮಿ ಒತ್ತುವರಿಯಾಗಿದ್ದು, ಅದರ ತೆರವಿಗೂ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠವು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿ, ಸ್ಮಶಾನ ಭೂಮಿ ಒದಗಿಸಲು ನಿರ್ದೇಶಿಸಿತು.

ಸ್ಮಶಾನ ಜಾಗ ಇಲ್ಲದ ಗ್ರಾಮಗಳಿಗೆ ಅಗತ್ಯ ಜಮೀನು ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2016ರ ಮಾ. 31ರ ತನಕ ರಾಜ್ಯದ 7,700 ಕಂದಾಯ ಗ್ರಾಮಗಳಲ್ಲಿ ಸ್ಮಾಶನ ಭೂಮಿ ಇರಲಿಲ್ಲ. ಎರಡು ವರ್ಷಗಳ ಅವಧಿಯಲ್ಲಿ 1,123 ಗ್ರಾಮಗಳಿಗೆ ಸ್ಮಶಾನ ಜಮೀನು ಮಂಜೂರು ಮಾಡಲಾಗಿದೆ. ಅದರಂತೆ, 2018ರ ಅ.31ಕ್ಕೆ ಸ್ಮಶಾನ ಜಾಗ ಇಲ್ಲದ ಗ್ರಾಮಗಳು ಸಂಖ್ಯೆ 6,053 ಆಗಿದೆ. ಇದೇ ವೇಳೆ ರಾಜ್ಯದಲ್ಲಿರುವ ಒಟ್ಟು ಸರಕಾರಿ ಜಮೀನು ಪೈಕಿ ಸುಮಾರು 11.79 ಲಕ್ಷ ಎಕರೆ ಜಮೀನು ಒತ್ತುವರಿಯಾಗಿದೆ ಎಂದು ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿತ್ತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ, ಸ್ಮಶಾನ ಜಾಗ ಇಲ್ಲದ ಗ್ರಾಮಗಳಿಗೆ ಆರು ತಿಂಗಳಲ್ಲಿ ಅಗತ್ಯ ಜಮೀನು ಮಂಜೂರು ಮಾಡಬೇಕು ಹಾಗೂ ಒತ್ತುವರಿಯಾಗಿರುವ ಸರಕಾರಿ ಜಮೀನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರಕ್ಕೆ ಆದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News