ಜಮ್ಮು ಕಾಶ್ಮೀರದಲ್ಲಿ ಮಾಧ್ಯಮ ನಿರ್ಬಂಧ: ಕೇಂದ್ರಕ್ಕೆ ಸುಪ್ರೀಂ ನೋಟಿಸ್
ಹೊಸದಿಲ್ಲಿ, ಆ.28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ತಕರಾರು ಅರ್ಜಿಯ ವಿಚಾರಣೆ ಆರಂಭಿಸಿದ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಸಂಬಂಧಿಸಿ ಅನುರಾಧಾ ಭಾಸಿನ್ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ 2 ನೋಟಿಸ್ ಜಾರಿಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಐದು ನ್ಯಾಯಮೂರ್ತಿಗಳ ಪೀಠ ಅರ್ಜಿಗಳ ವಿಚಾರಣೆಯನ್ನು ಆರಂಭಿಸಿ ಈ ಸಂಬಂಧ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, 370 ನೇ ವಿಧಿಯನ್ನು ರದ್ದುಪಡಿಸುವುದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಅಕ್ಟೋಬರ್ನಲ್ಲಿ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಈ ವಿಷಯದಲ್ಲಿ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರದ ಪರ ವಾದ ಮಂಡಿಸಿದರು.