ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

Update: 2019-08-31 15:39 GMT

ಮಂಡ್ಯ, ಆ.31: ಡಿ.ಕೆ.ಶಿವಕುಮಾರ್ ಅವರ ವಿಚಾರದಲ್ಲಿ ಬಿಜೆಪಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಕೋರ್ಟ್ ಅವರ ಅರ್ಜಿ ವಜಾ ಮಾಡಿದ ಹಿನ್ನೆಲೆಯಲ್ಲಿ ಇಡಿ ಮುಂದೆ ಹಾಜರಾಗಿದ್ದಾರೆ. ಶಿವಕುಮಾರ್ ಇದನ್ನು ರಾಜಕೀಕರಣಗೊಳಿಸುವ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಬಿಜೆಪಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರಕರಣ ಇವತ್ತು ನಿನ್ನೆಯದಲ್ಲ. ದೇಶದಲ್ಲಿ ಯಾರು ಅಕ್ರಮವಾಗಿ ಹಣ ಮಾಡಿದ್ದಾರೆ ಅವರೆಲ್ಲರ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳುತ್ತೆ ಎಂದು ಹೇಳಿದರು.

ಯಡಿಯೂರಪ್ಪ ಸಿಎಂ ಆದ ತಕ್ಷಣ ಸಿಂಗಲ್ ಮ್ಯಾನ್ ಆರ್ಮಿ ಆಗಿ ಓಡಾಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಸಮನ್ವಯ ಸಮಿತಿ ರಚನೆ ಆಗುವುದಿಲ್ಲ. ಇನ್ನು ಜೆಡಿಎಸ್‍ನ ಹಲವು ಶಾಸಕರು ಬಿಜೆಪಿಗೆ ಬರಬಹುದು. ಸಿ.ಎಸ್.ಪುಟ್ಟರಾಜು ಸೇರಿ ಅನೇಕರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮಧ್ಯಪ್ರದೇಶದಲ್ಲಿ ಜೋತಿರಾಧಿತ್ಯ ಸಿಂಧ್ಯಾ ಕಾಂಗ್ರೆಸ್ ಪಕ್ಷ ಬಿಡೋದಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News