ಸೆ.7 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

Update: 2019-09-03 11:47 GMT

ಬೆಂಗಳೂರು, ಸೆ.3: ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-2 ವೀಕ್ಷಿಸಲು ಸೆ.7ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ನೆರೆ ಹಾವಳಿಯಿಂದ ಆಗಿರುವ ನಷ್ಟಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಮುಂಬೈಗೆ ತೆರಳುವ ಮುನ್ನ ನಗರದ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಹಾಗೂ ನೆರೆ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂಬ ಮಾಹಿತಿಯನ್ನು ಪ್ರಧಾನಿಗೆ ನೀಡಲಾಗುವುದು ಎಂದರು.

ಮಹಾರಾಷ್ಟ್ರದಲ್ಲಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಹ್ವಾನದ ಮೇರೆಗೆ ಮುಂಬೈಗೆ ತೆರಳುತ್ತಿದ್ದೇನೆ. ಇದೇ ವೇಳೆ ಕೋಯ್ನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಆಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಅವರನ್ನು ಕೋರಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

ನನ್ನ ಜೊತೆ ಮುಂಬೈಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬರುತ್ತಿದ್ದಾರೆ. ಮಹಾರಾಷ್ಟ್ರ ಸಿಎಂ ಭೇಟಿ ಬಳಿಕ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗುತ್ತೇವೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News