ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲಿ: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ, ಸೆ.4: ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನಸಿಕ ಬೆಳವಣಿಗೆಗೆ ಪೂರಕ ವಾದ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ನೀಡುವ ಶಿಕ್ಷಣ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಹಿರಿದಾದುದು. ಶಿಕ್ಷಕರು ಮಕ್ಕಳ ಅನನ್ಯ ಪ್ರತಿಭೆಯನ್ನು ಗುರುತಿಸಿ ಅದನ್ನು ಫೋಷಿಸುವ ಕೆಲಸ ಮಾಡಿದಾಗ ಅವರ ವೃತ್ತಿಗೆ ನಿಜವಾದ ಸಾರ್ಥಕತೆ ಲಭಿಸುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಬೋಜೆಗೌಡ ಮಾತನಾಡಿ ದೇಶದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವವಾದುದು. ಎಲ್ಲಾ ವಿಷಯಗಳಲ್ಲಿ ಸಮಾನತೆ ಕಾಯ್ದು ಕೊಂಡು ಆರೋಗ್ಯಕರ ಸಮಾಜಕ್ಕಾಗಿ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕನ ಮೇಲಿದೆ. ಶಿಕ್ಷಕರು ತಮ್ಮ ವೃತ್ತಿಯ ಗೌರವವನ್ನು ಕಾಪಾಡಿ ಕೊಳ್ಳಬೇಕು ಎಂದರು.
ಧರ್ಮಪ್ರಾಂತ ಆಡಳಿತಕ್ಕೆ ಒಳಪಟ್ಟ ಶಾಲಾ, ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು, ಕಳೆದ ಶೈಕ್ಷಣಿಕ ವರ್ಷದಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳನ್ನು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಳೆದ ಒಂದು ವರ್ಷದಲ್ಲಿ ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಶಿಕ್ಷಣ ಸೊಸೈಟಿ ಆಡಳಿತಕ್ಕೊಳಪಟ್ಟ ಶಾಲೆಗಳಲ್ಲಿ ನಿಧನರಾದ ಶಿಕ್ಷಕರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಉಡುಪಿ ವಲಯ ಶಿಕ್ಷಣ ಅಧಿಕಾರಿ ಮಂಜುಳಾ, ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಶಿಕ್ಷಣ ಸೊಸೈಟಿಯ ನಿಕಟಪೂರ್ವ ಕಾರ್ಯದರ್ಶಿ ಪ್ರಸ್ತುತ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನ ರೆಕ್ಟರ್ ವಂ. ಡಾ.ಲೋರೆನ್ಸ್ ಡಿಸೋಜಾ, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ಟ್ಯಾನಿ ಬಿ ಲೋಬೊ ಉಪಸ್ಥಿತರಿದ್ದರು.
ಕೆಥೊಲಿಕ್ ಶಿಕ್ಷಣ ಸೊಸೈಟಿ ಕಾರ್ಯದರ್ಶಿ ವಂ.ವಿನ್ಸೆಂಟ್ ಕ್ರಾಸ್ತಾ ಸ್ವಾಗತಿಸಿ ಮೂಡುಬೆಳ್ಳೆ ಸಂತ ಲಾರೆನ್ಸ್ ಕಾಲೇಜಿನ ಉಪನ್ಯಾಸಕ ನವೀನ್ ಕೊರೆಯಾ ವಂದಿಸಿದರು. ಸಿಸ್ಟರ್ ಪ್ರೆಸಿಲ್ಲಾ ಮತ್ತು ಅನಿಲ್ ಕುರ್ಮಾ ಕಾರ್ಯಕ್ರಮ ನಿರೂಪಿಸಿದರು.