ಧಾರಾಕಾರ ಮಳೆ, ಪ್ರವಾಹದಿಂದ ಸಣ್ಣ ನೀರಾವರಿ ಇಲಾಖೆಗೆ 454 ಕೋಟಿ ರೂ. ನಷ್ಟ: ಸಚಿವ ಮಾಧುಸ್ವಾಮಿ

Update: 2019-09-04 16:37 GMT

ಬೆಳಗಾವಿ, ಸೆ.4: ಇತ್ತೀಚಿನ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದಾಗಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟಾರೆ 454 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಬುಧವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಬ್ಯಾರೇಜ್‌ಗಳು ಮತ್ತು ಏತ ನೀರಾವರಿ ಯೋಜನೆ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳಗಾವಿ, ಕಾರವಾರ, ಹಾವೇರಿ, ವಿಜಯಪುರ, ಕೊಪ್ಪಳದಲ್ಲಿ ಹಾನಿ ಪ್ರಮಾಣ ಜಾಸ್ತಿಯಾಗಿದೆ. ಸಂಪರ್ಕ ಕಡಿತಗೊಂಡಿರುವ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದಕ್ಕೆ ಇಲಾಖೆ ವತಿಯಿಂದ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಹಾನಿಗೊಳಗಾದ ಬ್ಯಾರೇಜ್‌ಗಳಲ್ಲಿ ತಕ್ಷಣಕ್ಕೆ ನೀರು ನಿಲ್ಲಿಸಲಾಗುವುದು. ನಂತರ ಎತ್ತರ ಹೆಚ್ಚಿಸಲು, ರಸ್ತೆ, ಸೇತುವೆ ಮತ್ತಿತರ ಶಾಶ್ವತ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗವುದು ಎಂದು ಮಾಧುಸ್ವಾಮಿ ತಿಳಿಸಿದರು.

ಐದು ಲಕ್ಷ ರೂ. ಗಳಿಗಿಂತ ಕಡಿಮೆ ಅನುದಾನದಲ್ಲಿ ಕೈಗೊಳ್ಳಬಹುದಾದ ಕೆಲಸಗಳನ್ನು ಕೂಡಲೇ ಆರಂಭಿಸಲಾಗುವುದು. ಅದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಸಬೇಕಿರುವುದರಿಂದ ಸ್ವಲ್ಪಕಾಲಾವಕಾಶ ಬೇಕಾಗುತ್ತದೆ ಎಂದು ಅವರು ಹೇಳಿದರು.

ಕೇಂದ್ರದಿಂದ 11 ಕೋಟಿ ರೂ. ಪರಿಹಾರ ಸಾಧ್ಯ: ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ 454 ಕೋಟಿ ರೂ.ಹಾನಿಯಾಗಿದ್ದರೂ ಕೇಂದ್ರ ಸರಕಾರದಿಂದ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕೇವಲ 11 ಕೋಟಿ ರೂ.ಮಾತ್ರ ಪರಿಹಾರ ಲಭಿಸುವುದು ಸಾಧ್ಯವಾಗಲಿದೆ. ಆದ್ದರಿಂದ ದುರಸ್ತಿ ಹಾಗೂ ಪುನರ್ ನಿರ್ಮಾಣ ಕಾಮಗಾರಿಗಳನ್ನು ರಾಜ್ಯ ಸರಕಾರದಿಂದಲೇ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಮಾಧುಸ್ವಾಮಿ ವಿವರಿಸಿದರು.

ಬೆಳಗಾವಿಯಲ್ಲಿ 55 ಕೋಟಿ ರೂ.ನಷ್ಟ: ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 55 ಕೋಟಿ ರೂ.ನಷ್ಟವಾಗಿದೆ. ಹಂತ ಹಂತವಾಗಿ ದುರಸ್ತಿ ಮತ್ತು ಪುನರ್ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಗೋಕಾಕ್ ಪಟ್ಟಣದ ಸಮೀಪದಲ್ಲಿ ಇರುವ ಗಟ್ಟಿ ಬಸವಣ್ಣ ಏತ ನೀರಾವರಿ ಯೋಜನೆಯನ್ನು ಪರಿಶೀಲಿಸಿದ ಅವರು, ಪ್ರವಾಹದಿಂದ ಆಗಿರುವ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ, ಪಂಪ್ ಹೌಸ್ ಸಾಮರ್ಥ್ಯವನ್ನು ಹೆಚ್ಚಿಸುವಂತೆ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿದ ಯೋಗಿಕೊಳ್ಳ ಗ್ರಾಮಸ್ಥರು, ಪ್ರವಾಹದಿಂದ ಮುಳುಗಡೆಯಾಗುವ ರಸ್ತೆಯ ಎತ್ತರ ಹೆಚ್ಚಿಸಬೇಕೆಂದು ಮನವಿ ಮಾಡಿದರು. ಇತ್ತೀಚೆಗೆ ಮಾರ್ಕಂಡೇಯ ನದಿಯ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದು, ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಗ್ರಾಮದ ಮಹಿಳೆಯರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ಸಂತ್ರಸ್ತರಿಗೆ ಮನೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಕಾರ್ಯನಿರ್ವಾಹಕ ಅಭಿಯಂತರ ಕೆ.ಸಿ.ಸತೀಶ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೆಳವಂಕಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News