ಸಾರ್ವಜನಿಕ ಆಸ್ತಿ ರೂಪುಗೊಳ್ಳುವ ಕಾಮಗಾರಿ ಕೈಗೆತ್ತಿಕೊಳ್ಳಲು ಡಿಸಿಎಂ ಕಾರಜೋಳ ಸೂಚನೆ

Update: 2019-09-07 12:58 GMT

ಬೆಂಗಳೂರು. ಸೆ. 7: ಸಾರ್ವಜನಿಕ ಆಸ್ತಿಯಾಗಿ ಸೃಜಿಸಲ್ಪಡಬಹುದಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ವಿಧಾನಸೌದಲ್ಲಿ ಕೆಆರ್‌ಡಿಸಿಎಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗಮವು ಸಾರ್ವಜನಿಕ ಆಸ್ತಿಯಾಗಿ ರೂಪುಗೊಳ್ಳುವ ಉತ್ತಮ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು, ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಪೈಪ್‌ಲೈನ್, ಕೇಬಲ್ ಹಾಗು ರಸ್ತೆ ತಡೆಗಳನ್ನು ಅಳವಡಿಸಲು ರಸ್ತೆಗಳನ್ನು ಹಾಳು ಮಾಡುತ್ತಿದ್ದು, ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ತಂತ್ರಜ್ಞಾನ ಅಳವಡಿಕೆ ಮೂಲಕ ರಸ್ತೆಗಳನ್ನು ನಿರ್ವಹಣೆ ಮಾಡಿ, ರಸ್ತೆ ತಡೆಗಳನ್ನು ವೈಜ್ಞಾನಿಕ ಮಾದರಿಯಲ್ಲಿ ಅಳವಡಿಸಲು ಕ್ರಮಕೈಗೊಳ್ಳಬೇಕು.

ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಳಂಬ ನೀತಿಯಿಂದ ಸಾರ್ವಜನಿಕರಿಗೆ ತೊಂದರೆ, ಜೊತೆಗೆ ಕಾಮಗಾರಿ ವೆಚ್ಚವೂ ಅಧಿಕ. ಹೀಗಾಗಿ ನಿಗಮವು ಸದೃಢವಾಗಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ನೆರೆ ಪೀಡಿತ ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಪಂಗಡ(ಎಸ್ಸಿ-ಎಸ್ಟಿ)ದವರಿಗೆ ಮೂಲಭೂತ ಸೌಕರ್ಯ ಒದಗಿಸಲು ಎಲಿವೇಟೆಡ್ ಕಾರಿಡಾರ್ ಅನುದಾನವನ್ನು ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಗೆ ನೀಡಲು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಗುರುಪ್ರಸಾದ್, ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್, ಡಿಸಿಎಂ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ, ಕೆಶಿಪ್ ಸಿಪಿಓ ಕೃಷ್ಣರೆಡ್ಡಿ, ಕೆಆರ್‌ಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News