ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು
Update: 2019-09-07 14:42 GMT
ಬೆಂಗಳೂರು, ಸೆ.7: ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಕಟ್ಟಡದಿಂದ ಕೆಳಗ್ಗೆ ಬಿದ್ದು ಸಾವನ್ನಪ್ಪಿರುವ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊರ ರಾಜ್ಯದ ಭರತ್ ಎಂಬಾತ ಮೃತ ಕಾರ್ಮಿಕ ಎಂದು ಪೊಲೀಸರು ತಿಳಿಸಿದ್ದಾರೆ. ಕೊಡಿಗೆಹಳ್ಳಿಯ ಬಳಿ ಖಾಸಗಿ ಸಂಸ್ಥೆಯೊಂದರ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಭರತ್ ಕಾರ್ಯ ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಬಿದ್ದು, ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕೆಲಸ ನಿರ್ವಹಿಸುವ ಸ್ಥಳದಲ್ಲಿ ಯಾವುದೇ ರಕ್ಷಣೆ ಇರಲಿಲ್ಲ. ಹೀಗಾಗಿಯೇ, ಭರತ್ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಕೊಡಿಗೆಹಳ್ಳಿ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.