ಅಪಘಾತ ವಲಯಗಳಲ್ಲಿ ದುರ್ಘಟನೆ ಸಂಭವಿಸಿದೆ ಇಂಜಿನಿಯರ್ ವಿರುದ್ಧ ಎಫ್‍ಐಆರ್: ಡಿಸಿ ಬಗಾದಿ ಗೌತಮ್

Update: 2019-09-07 17:19 GMT

ಚಿಕ್ಕಮಗಳೂರು, ಸೆ.7: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯವಿರುವ ಸಂಚಾರಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಜನರು ಸುರಕ್ಷಿತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕೈಗೊಳ್ಳುವ ಅಗತ್ಯವಿದೆ. ನಗರದ ಇಂದಿರಾಗಾಂಧಿ ರಸ್ತೆಯ ಶೃಂಗಾರ್ ಸರ್ಕಲ್‍ನಿಂದ ಬೋಳ ರಾಮೇಶ್ವರ ದೇವಸ್ಥಾನದ ರಸ್ತೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ರಸ್ತೆಯಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಸಿದಾಗ ಅಪಘಾತ ರಹಿತ ಸಂಚಾರ ಸಾಧವಾಗಲಿದೆ. ಅಧಿಕಾರಿಗಳು ಶೀಘ್ರ ಕ್ರಮ ವಹಿಸಿ ಎಂದರು.

ದೇಶಾದ್ಯಂತ 8,567 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ 50 ಅಪಘಾತ ವಲಯಗಳಿವೆ. ಈ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆಯಾಗಿದೆ. ಈ ರಸ್ತೆಗಳ ಕಾಮಗಾರಿ ಮತ್ತು ರಸ್ತೆ ಸುರಕ್ಷತಾ ಕ್ರಮಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕು. ಅಪಘಾತ ವಲಯದಲ್ಲಿ ಯಾವುದೇ ಅಪಘಾತ ಸಂಭವಿಸಿದರೆ ಕಾಮಗಾರಿಗೆ ಸಂಬಂಧಿಸಿದ ಇಂಜಿನಿಯರ್ ಮೇಲೆ ಎಫ್.ಐ.ಆರ್ ದಾಖಲು ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಬಗ್ಗೆ ಅಧಿಕಾರಿಗಳನ್ನು ಇದೇ ವೇಳೆ ಜಿಲ್ಲಾಧಿಕಾರಿ ಎಚ್ಚರಿಸಿದರು.

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್ ಗಳಿಂದ ಉಂಟಾಗುವ ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಗ್ಯಾರೇಜುಗಳ ಮೇಲೆ ಕ್ರಮಕೈಗೊಂಡಿರುವ ಬಗ್ಗೆ ಮಾಹಿತಿ ಪಡೆದ ಅವರು, ರಸ್ತೆಯಲ್ಲಿ ಅಪಘಾತವಾದಾಗ ಪ್ರಥಮ ಚಿಕಿತ್ಸೆ ನೀಡಲು ಬೈಕ್‍ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಮೂಡಿಗೆರೆ ಹಾಗೂ ತರೀಕೆರೆ-ಕೆಮ್ಮಣ್ಣುಗುಂಡಿ ಮಾರ್ಗದಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಅನಧಿಕೃತವಾಗಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಇದರ ಬಗ್ಗೆ ಶಿಸ್ತಿನ ಕ್ರಮಕೈಗೊಂಡು ದಂಡ ವಿಧಿಸಬೇಕು ಎಂದು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಮಾತನಾಡಿ, ವಾಹನಗಳ ಪಾರ್ಕಿಂಗ್ ದಟ್ಟಣೆಯಿಂದಾಗಿ ಹಳೆಯ ಜೈಲಿನ ಜಾಗದಲ್ಲಿ ಬಸ್‍ಗಳನ್ನು ಮತ್ತು ಇತರ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದಕ್ಕೆ ಯಾವುದೇ ರೀತಿಯ ಶುಲ್ಕ ವಸೂಲಿ ಮಾಡುತ್ತಿಲ್ಲ. ಅದಕ್ಕೆ ಪರಿಹಾರವಾಗಿ ಕೆಎಸ್ಸಾರ್ಟಿಸಿ ಇಲಾಖೆಯವರು ನಿಗಧಿತ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ವಾಹನ ಮಾಲಕರಿಂದ ಶುಲ್ಕ ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿಯ ಅಪಘಾತ ವಲಯಗಳ ಪೈಕಿ ಐ.ಜಿ.ರಸ್ತೆಯು ಅತ್ಯಂತ ಸೂಕ್ಷ್ಮ ಬ್ಲಾಕ್‍ಸ್ಪಾಟ್ ರಸ್ತೆಯಾಗಿದೆ. ಕಳೆದ 5 ವರ್ಷಗಳಿಂದ 29 ಅಪಘಾತಗಳಾಗಿ 4 ಜನ ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ವಾಹನಗಳು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದು, ಇದನ್ನು ತಡೆಯಲು ವೈಜ್ಞಾನಿಕವಾಗಿ ರಸ್ತೆ ವಿಭಜಕವನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಶೀಘ್ರದಲ್ಲಿಯೇ ರಸ್ತೆ ವಿಭಜಕಗಳನ್ನು ಅಳವಡಿಸಲು ಮುಂದಾಗಬೇಕು ತಿಳಿಸಿದರು.

ರಸ್ತೆಯಲ್ಲಿ ವಿದ್ಯುತ್‍ ತಂತಿಯನ್ನು ಸ್ಪರ್ಶಿಸುತ್ತಿರುವ ಮರಗಳ ಕೊಂಬೆಯನ್ನು ತೆರವುಗೊಳಿಸಲಾಗಿದೆ. ಉಳಿದ ಭಾಗಗಳು ಗಾಳಿ ಹಾಗೂ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಅವುಗಳನ್ನು ಸಹ ಕತ್ತರಿಸಿ ತೆಗೆಯಲು ಮೆಸ್ಕಾಂ ಅಧಿಕಾರಿಗಳು ಮುಂದಾಗಬೇಕು ಎಂದು ಇದೇ ವೇಳೆ ಎಸ್ಪಿ ಸೂಚಿಸಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆಅಧಿಕಾರಿ ಎಂ.ಬಿ.ಶಿರೋಳ್ಕರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎನ್.ಚಂದ್ರಶೇಖರ್ ಮತ್ತು ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News