ಆದಿವಾಸಿಗಳಿಗೆ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ: ಸಚಿವ ವಿ.ಸೋಮಣ್ಣ

Update: 2019-09-07 17:31 GMT

ಮೈಸೂರು,ಸೆ.7: ಈ ಬಾರಿ ಜಿಲ್ಲೆಯ ಆದಿವಾಸಿ ಜನರಿಗೆ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಜಿಲ್ಲಾಡಳಿತದ ವತಿಯಿಂದ ಕಲ್ಪಿಸಲಾಗುವುದು ಎಂದು ವಸತಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮೀಣ ದಸರಾ ಮಹೋತ್ಸವ ಏರ್ಪಡಿಸುವ ಸಂಬಂಧ ಆಯೋಜಿಸಿದ್ದ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಗಡಿ ತಾಲೂಕುಗಳಾದ ಎಚ್.ಡಿ.ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ನೆಲೆಸಿರುವ ಆದಿವಾಸಿ ಜನರನ್ನು ದಸರಾ ಉತ್ಸವದ ವೇಳೆ ಬಸ್ ಗಳ ಮೂಲಕ ಮೈಸೂರಿಗೆ ಕರೆತಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಾರಿ ನಮ್ಮ ಆದ್ಯತೆಯ ಕೆಲಸವಾಗಿದೆ. ಹೀಗೆ ಮೈಸೂರಿಗೆ ಆಗಮಿಸುವ ಗಿರಿಜನರಿಗೆ ಊಟೋಪಚಾರದ ವ್ಯವಸ್ಥೆಯೊಂದಿಗೆ ಚಾಮುಂಡಿ ಬೆಟ್ಟ, ಅರಮನೆ ಹಾಗೂ ಮೃಗಾಲಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಇದರೊಂದಿಗೆ ಗ್ರಾಮೀಣ ಜನರನ್ನು ದಸರಾ ಹಬ್ಬದಲ್ಲಿ ಸಕ್ರಿಯವಾಗಿ ತೊಡಗಿಸುವ ಕೆಲಸ ಆಗಬೇಕು. ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮಸ್ಥರು ನಮ್ಮೊಂದಿಗೆ ಕೈಜೋಡಿಸುವ ಮೂಲಕ ನಾಡಹಬ್ಬದ ಯಶಸ್ಸಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಗ್ರಾಮೀಣ ದಸರಾ ಆಯೋಜನೆಗಾಗಿಯೇ ಜಿಲ್ಲಾ ಪಂಚಾಯತ್ ಗೆ 50 ಲಕ್ಷ ರೂ. ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಪ್ರತಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಗೆ ದಸರಾ ಅಲಂಕಾರಕ್ಕೆಂದೇ ಪ್ರತ್ಯೇಕವಾಗಿ 2 ಲಕ್ಷ ರೂಪಾಯಿ ಬಿಡುಗಡೆ ಮಾಡುವುದಾಗಿ ಹೇಳಿದರು. ದಸರಾ ಸಂಬಂಧಿತ ಕಾಮಗಾರಿಗಳನ್ನು ನಡೆಸುವಾಗ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು, ಶಾಸಕ ನಿರಂಜನ್ ಕುಮಾರ್, ಮಾಜಿ ಶಾಸಕರಾದ ಸಿದ್ದರಾಜು, ಕೋಟೆ ಎಂ.ಶಿವಣ್ಣ,  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ, ಉಪವಿಭಾಗಾಧಿಕಾರಿ ವೀಣಾ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹ, ತಾಲುಕು ಪಂಚಾಯತ್ ಅಧ್ಯಕ್ಷೆ ಮಂಜುಳ ದೇವಣ್ಣ, ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಯೋಗೇಶ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News