ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

Update: 2019-09-09 13:57 GMT

 ಲಕ್ನೊ, ಸೆ.9: ಸ್ಥಳೀಯ ಬಿಜೆಪಿ ಮುಖಂಡ ರಾಕೇಶ್ ಶರ್ಮರನ್ನು ಗುರುತಿಸಲಾಗದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಹಾಪುರ್ ಜಿಲ್ಲೆಯ ಧೌಲಾನಾ ಪ್ರದೇಶದಲ್ಲಿ ನಡೆದಿದೆ.

ಛಜ್‌ಪುರ ಜಿಲ್ಲೆಯ ಸರಕಾರಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿರುವ ಶರ್ಮ ಹಾಪುರ್ ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಕರಣ್‌ಪುರದ ತನ್ನ ಮನೆಯಿಂದ ಕರ್ತವ್ಯಕ್ಕೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಪ್ನಾವತ್ ಪೊಲೀಸ್ ಠಾಣೆಯ 1 ಕಿ.ಮೀ. ದೂರದಲ್ಲಿರುವ ನಿರ್ಜನ ಪ್ರದೇಶದಲ್ಲಿ ಅವರ ಮೇಲೆ ಸನಿಹದಿಂದ ಗುಂಡು ಹಾರಿಸಲಾಗಿದೆ. ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಶರ್ಮ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದರು. ನ್ಯಾಯಾಲಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಸ್ಥಳೀಯರ ಪರವಾಗಿದ್ದರು. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದೆ. ಆದರೆ ಕುಟುಂಬದವರು ಎಫ್‌ಐಆರ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ಹಾಪುರ್‌ನ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News