ಡಿ.ಕೆ.ಶಿವಕುಮಾರ್ ಆರೋಗ್ಯ ವಿಚಾರಿಸಿದ ಸೋನಿಯಾ ಗಾಂಧಿ
Update: 2019-09-10 12:14 GMT
ಹೊಸದಿಲ್ಲಿ, ಸೆ.10: ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ಸಂಸದ ಡಿ.ಕೆ.ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು, ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಅವರ ಸಹೋದರ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ, ನೈತಿಕ ಸ್ಥೈರ್ಯ ತುಂಬಿದರು. ಮಂಗಳವಾರ ಬೆಳಗ್ಗೆ ಸುರೇಶ್ ಅವರಿಗೆ ದೂರವಾಣಿ ಕರೆ ಮಾಡಿದ ಸೋನಿಯಾಗಾಂಧಿ, ಹೊಸದಿಲ್ಲಿಯ ಜನಪಥ್ ರಸ್ತೆಯಲ್ಲಿರುವ ತಮ್ಮ ನಿವಾಸಕ್ಕೆ ಬರುವಂತೆ ಆಹ್ವಾನ ನೀಡಿದರು. ಸುಮಾರು 30 ನಿಮಿಷಗಳ ಕಾಲ ಅವರ ಜೊತೆ ಮಾತುಕತೆ ನಡೆಸಿ, ಡಿ.ಕೆ.ಶಿವಕುಮಾರ್ ಆರೋಗ್ಯದ ಬಗ್ಗೆ ವಿಚಾರಿಸಿದರು. ಅಷ್ಟೇ ಅಲ್ಲದೇ, ಡಿ.ಕೆ.ಶಿವಕುಮಾರ್ ಅವರ ಜೊತೆ ನಾವೆಲ್ಲರೂ ಇದ್ದೇವೆ. ಪಕ್ಷ ಅವರ ಜೊತೆಗಿದೆ. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳುವುದು ಬೇಡ. ಅದು ಕಾನೂನು ಹೋರಾಟವೇ ಇರಲಿ, ರಾಜಕೀಯ ಹೋರಾಟವೇ ಇರಲಿ ಅವರೊಂದಿಗೆ ನಾವೆಲ್ಲರೂ ಇದ್ದೇವೆಂದು ಅವರಿಗೆ ತಿಳಿಸಿ ಎಂದು ಸೋನಿಯಾಗಾಂಧಿ ಹೇಳಿದ್ದಾರೆ. ಕೇಂದ್ರ ಸರಕಾರ ತಮ್ಮ ಪ್ರಬಲ ವಿರೋಧಿಗಳನ್ನು ಸದೆ ಬಡಿಯಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ತಮಗೆ ಗೊತ್ತಿದೆ. ಕಾಲವೇ ಎಲ್ಲಕ್ಕೂ ಉತ್ತರ ಹೇಳಲಿದೆ. ಶಿವಕುಮಾರ್ ಎಲ್ಲವನ್ನೂ ಗೆದ್ದು ಬರಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಸುರೇಶ್ ಗೆ ಸೋನಿಯಾಗಾಂಧಿ ತಿಳಿಸಿದ್ದಾರೆ.