ಸೆ. 17 ರಿಂದ 25 ರವರೆಗೆ ಯುವ ಸಂಭ್ರಮ: ವಿ ಸೋಮಣ್ಣ

Update: 2019-09-11 09:22 GMT

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ. 17 ರಿಂದ 25 ಹಮ್ಮಿಕೊಂಡಿರುವ ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಲು ಖ್ಯಾತ ಚಲನಚಿತ್ರ ನಟ ಗಣೇಶ ಅವರನ್ನು ಆಹ್ವಾನಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯುವ ಸಂಭ್ರಮ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ಈ ಬಾರಿ 278 ಕಾಲೇಜುಗಳು ಯುವ ಸಂಭ್ರಮದಲ್ಲಿ ಭಾಗವಹಿಸುತ್ತಿದೆ ಎಂದರು.

ಯುವ ಸಂಭ್ರಮದಲ್ಲಿ ಕಿರು ನಾಟಕ, ಮೈಮ್ ಇತ್ಯಾದಿಗಳಿಗೆ ಅವಕಾಶ ನೀಡಲಾಗಿದೆ. ಪರಿಸರ ಸಂರಕ್ಷಣೆ ಮತ್ತು ಮಾನವ ನಿರ್ಮಿತ ಆಪತ್ತುಗಳು, ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ, ಭಾರತದ ಸ್ವಾತಂತ್ರ್ಯ ಚಳುವಳಿ, ಸಂಚಾರ ನಿಯಮಗಳ ಪಾಲನೆ ಇತ್ಯಾದಿ ವಿಷಯಗಳ ಆಧಾರಿತ ಪ್ರದರ್ಶನ ನೀಡಲು  ಕಾಲೇಜುಗಳಿಗೆ ತಿಳಿಸಲಾಗಿದೆ ಎಂದರು.

ದೂರದ ಊರುಗಳಿಂದ ಬರುವ ಕಾಲೇಜು ತಂಡಗಳಿಗೆ ಮೈಸೂರು ರೈಲು ಹಾಗೂ ಬಸ್ ನಿಲ್ದಾಣದಿಂದ ವಾಹನ ಸೌಲಭ್ಯ ಕಲ್ಪಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News