33,618 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-09-11 15:49 GMT

ಬೆಂಗಳೂರು, ಸೆ.11: ವಾಣಿಜ್ಯ ತೆರಿಗೆ ಇಲಾಖೆಯ ಈ ವರ್ಷದ ತೆರಿಗೆ ಸಂಗ್ರಹ ಗುರಿ 76,046 ಕೋಟಿ ರೂ. ಆಗಿದ್ದು, ಈ ವರೆಗೆ 33,618 ಕೋಟಿ ರೂ. ತೆರಿಗೆ ಸಂಗ್ರಹ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಇದು ವಾರ್ಷಿಕ ಗುರಿಯ ಶೇ.44.2ರಷ್ಟು ಇದೆ. ಕಳೆದ ವರ್ಷ ಇದೇ ಅವಧಿಯ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ, ಶೇ.20.3 ರಷ್ಟು ಹೆಚ್ಚಳ ಆಗಿದೆ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿಯೂ ಶೇ.14.3 ರಷ್ಟು ಬೆಳವಣಿಗೆ ಆಗಿದೆ ಎಂದು ಅವರು ಹೇಳಿದರು.

ಜಿಎಸ್‌ಟಿ ಜಾರಿಯಾದಾಗ 4.51 ಲಕ್ಷ ಮಂದಿ/ಕಂಪೆನಿಗಳು ಜಿಎಸ್‌ಟಿಯಲ್ಲಿ ನೋಂದಾಯಿಸಿಕೊಂಡಿದ್ದರು. ಈಗ ನೋಂದಣಿ ಮಾಡಿಕೊಂಡವರ ಸಂಖ್ಯೆ 8,16,573 ದಾಟಿದ್ದು, ಜಿಎಸ್‌ಟಿಯಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆ ಸುಮಾರು ಶೇ.100ರಷ್ಟು ಹೆಚ್ಚಳವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಆರ್ಥಿಕ ಹಿಂಜರಿತದಿಂದ ಸ್ವಲ್ಪ ಹಿನ್ನಡೆಯಾಗಿದ್ದರೂ, ಇತರ ರಾಜ್ಯಗಳಿಗೆ ಹೋಲಿಸಿದರೆ ಉತ್ತಮ ಸ್ಥಿತಿಯಲ್ಲಿದ್ದೇವೆ. ತೆರಿಗೆ ಸಂಗ್ರಹವನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, ವ್ಯಾಪಾರದ ಸ್ಥಳಕ್ಕೆ ಭೇಟಿ ನೀಡಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಜಿಎಸ್‌ಟಿ ಪಾವತಿಯಲ್ಲಿ ನಿರ್ಲಕ್ಷ್ಯ ತೋರಿದ 64 ಸಾವಿರಕ್ಕೂ ಹೆಚ್ಚು ಪರವಾನಗಿಗಳನ್ನು ರದ್ದುಪಡಿಸಲಾಗಿದೆ ಎಂದು ಅವರು ಹೇಳಿದರು.

ನಿಯಮಿತ ತಪಾಸಣೆ ಜೊತೆಗೆ ಇ-ವೇ ಬಿಲ್ಲುಗಳ ತಪಾಸಣೆಯನ್ನೂ ಕಟ್ಟುನಿಟ್ಟಾಗಿ ನಡೆಸುವ ಮೂಲಕ, ತೆರಿಗೆ ಸಂಗ್ರಹಣೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಾಲಿನಲ್ಲಿ 44 ಲಕ್ಷ ಇ-ವೇ ಬಿಲ್‌ಗಳನ್ನು ತಪಾಸಣೆ ಮಾಡಲಾಗಿದೆ. ಜಿಎಸ್‌ಟಿ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜಾರಿ ಮತ್ತು ಜಾಗೃತಿ ವಿಭಾಗಗಳನ್ನು ಬಲಪಡಿಸಲು ಸೂಚಿಸಲಾಗಿದೆ. ತೆರಿಗೆ ಸೋರಿಕೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಟ್ಟಾರೆ ಬೆಳವಣಿಗೆ ಶೇ.14.16 ರಷ್ಟಿದ್ದು, ಇತರ ರಾಜ್ಯಗಳಿಗಿಂತ ಉತ್ತಮ ಬೆಳವಣಿಗೆ ಆಗಿದೆ. ಆದರೆ ಇನ್ನೂ ಉತ್ತಮ ಸ್ಥಿತಿಗೆ ತರಬೇಕೆಂದು ಸೂಚನೆ ಕೊಟ್ಟಿದ್ದೇನೆ ಎಂದು ಅವರು ಹೇಳಿದರು.

ಬೆಳವಣಿಗೆ ದರ ಸುನಿಶ್ಚಿತಗೊಳಿಸಲು ಎಲ್ಲ ಪ್ರಯತ್ನ ಮಾಡಬೇಕು. ಜಿಎಸ್‌ಟಿ ಸಂರಕ್ಷಿತ ತೆರಿಗೆ ಮತ್ತು ವಾಸ್ತವ ತೆರಿಗೆ ಸಂಗ್ರಹದ ನಡುವಿನ ಅಂತರ ಕಡಿಮೆಗೊಳಿಸಬೇಕು. ವಿಭಾಗೀಯ ಜಂಟಿ ಆಯುಕ್ತರು, ರಾಜಸ್ವ ಸಂಗ್ರಹ ಕೊರತೆ ಆಗದಂತೆ ಎಚ್ಚರ ವಹಿಸಬೇಕು. ಅಲ್ಲದೇ, ಮೇಲ್ಮನವಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.

ಅಬಕಾರಿ ಇಲಾಖೆಯಲ್ಲಿ 2019-2020ನೇ ಸಾಲಿಗೆ 20,950 ರೂ.ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿದೆ. ಎಪ್ರಿಲ್ 1 ರಿಂದ ಆಗಸ್ಟ್ 30ರವರೆಗೆ 9145.36 ಕೋಟಿ ರೂ.ಸಂಗ್ರಹವಾಗಿದ್ದು, ಶೇ.43.65 ರಷ್ಟು ಗುರಿ ಸಾಧನೆಯಾಗಿದೆ. ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು, ವರ್ಷಾಂತ್ಯಕ್ಕೆ ನಿಗದಿತ ಗುರಿ ಸಾಧಿಸುವ ವಿಶ್ವಾಸವಿದೆ. ತೆರಿಗೆ ಸಂಗ್ರಹದಲ್ಲಿ ಕಳೆದ ವರ್ಷಕ್ಕಿಂತ 952.70 ಕೋಟಿ ರೂ. ಹೆಚ್ಚುವರಿ ಮೊತ್ತ ಸಂಗ್ರಹವಾಗಿದ್ದು, ಶೇ. 11.63 ರಷ್ಟು ಹೆಚ್ಚಳವಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಾರಿಗೆ ಇಲಾಖೆ ಹಾಗೂ ಸಾರಿಗೆ ನಿಗಮಗಳ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 7100 ಕೋಟಿ ರೂ.ಗಳಷ್ಟಿದ್ದು, ಆಗಸ್ಟ್ 30ರ ವರೆಗೆ 2750.82 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು. ಅದರಲ್ಲಿ 2476 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಗುರಿಯ ಶೇ.90 ರಷ್ಟಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವಾಹನ ಮಾರಾಟದಲ್ಲಿ ಸಾರಿಗೆ ಮತ್ತು ಸಾರಿಗೇತರ ವಾಹನಗಳ ನೋಂದಣಿಯಲ್ಲಿ ಶೇ.10.34 ರಷ್ಟು ಕಡಿಮೆಯಾಗಿದೆ. ಇದರಿಂದಾಗಿ ತೆರಿಗೆ ಸಂಗ್ರಹದಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ ನಂತರ ಸುಧಾರಣೆಯಾಗುವ ನಿರೀಕ್ಷೆ ಇದೆ ಎಂದು ಯಡಿಯೂರಪ್ಪ ಹೇಳಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ತೆರಿಗೆ ಸಂಗ್ರಹದ ವಾರ್ಷಿಕ ಗುರಿ 11,828 ಕೋಟಿ ರೂ.ಗಳಷ್ಟಿದ್ದು, ಆ.30ರ ವರೆಗೆ 4574.51 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು. ಅದರಲ್ಲಿ 4620.30 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಶೇ.101.1 ರಷ್ಟಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹವಾದ ತೆರಿಗೆಗಿಂತ 530.27 ಕೋಟಿ ರೂ.ತೆರಿಗೆ ಹೆಚ್ಚಳವಾಗಿದೆ ಎಂದು ಅವರು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಆಸ್ತಿ ನೋಂದಣಿಯಲ್ಲಿ ಬೆಂಗಳೂರಿನಲ್ಲಿ ಶೇ. 3.86 ರಷ್ಟು ಹೆಚ್ಚಳವಾಗಿದೆ. ವಿವಿಧ ಸೇವೆಗಳನ್ನು ಆನ್ ಲೈನ್‌ನಲ್ಲಿ ಒದಗಿಸುತ್ತಿರುವುದು ತೆರಿಗೆ ಸಂಗ್ರಹಕ್ಕೆ ಪೂರಕವಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ 2019-20ನೇ ಸಾಲಿಗೆ 3550 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಇತ್ತು. ಅದರಲ್ಲಿ ಒಟ್ಟು 1314 ಕೋಟಿ ರೂ. ಅಂದರೆ ಶೇ. 37 ರಷ್ಟು ರಾಜಸ್ವ ಸಂಗ್ರಹ ಆಗಿದೆ. ಆರ್ಥಿಕ ವರ್ಷದ ಅಂತ್ಯದ ವೇಳೆಗೆ ನಿಗದಿತ ಗುರಿ ಸಾಧಿಸುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿ ಮರಳು ಮಾಫಿಯಾ ಮಟ್ಟಹಾಕಿ ಜನಸಾಮಾನ್ಯರಿಗೆ ಸುಲಭ ದರದಲ್ಲಿ ಮರಳು ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಇವತ್ತು ಅಧಿಕಾರಿಗಳಿಗೆ ತೆರಿಗೆ ಸಂಗ್ರಹದ ನಿಗದಿತ ಗುರಿ ಸಾಧನೆ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ನೀಡಿದ್ದೇನೆ. ಅವರ ಸಮಸ್ಯೆಗಳಿಗೂ ಸ್ಪಂದಿಸುವ ಭರವಸೆ ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ನಾವು ನಮ್ಮ ನಿಗದಿತ ಗುರಿ ಸಾಧಿಸುವ ವಿಶ್ವಾಸ ಹೊಂದಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News