ಯುವಕನಿಗೆ ‘ಥರ್ಡ್ ಡಿಗ್ರಿ ಟ್ರೀಟ್ಮೆಂಟ್: ಪೊಲೀಸ್ ಇನ್ಸ್ಪೆಕ್ಟರ್ ಅಮಾನತು
Update: 2019-09-12 16:37 GMT
ಬೆಂಗಳೂರು, ಸೆ.12: ಆರೋಪಿ ಯುವಕನೋರ್ವನನ್ನು ಠಾಣೆಗೆ ಕರೆತಂದು ’ಥರ್ಡ್ ಡಿಗ್ರಿ ಟ್ರೀಟ್ಮೆಂಟ್’ ನೀಡಿದ ಆರೋಪದಡಿ ಇಲ್ಲಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್ಪೆಕ್ಟರ್ ಶ್ರೀಕಂಠೆಗೌಡ ಎಂಬವರನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.
ಖಾಸಗಿ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶವಂತ್ ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?: ಲೈಂಗಿಕವಾಗಿ ಸಹಕರಿಸದಿದ್ದರೆ ಆ್ಯಸಿಡ್ ಎರಚಿ ಕೊಲೆ ಮಾಡುವ ಬೆದರಿಕೆ ಹಾಕಿದ್ದ ಎಂದು ಯುವತಿಯೊಬ್ಬಾಕೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಇದರ ಆರೋಪದ ಮೇಲೆ ಸುಬ್ರಹ್ಮಣ್ಯನಗರ ಠಾಣೆಗೆ ಕರೆತರಲಾಗಿತ್ತು. ಬಳಿಕ, ಠಾಣೆಯ ಕೊಠಡಿಯಲ್ಲಿಯೇ ಪೊಲೀಸರು ಆರೋಪಿಯನ್ನು ಕಟ್ಟಿ ಹಾಕಿ ‘ಥರ್ಡ್ ಡಿಗ್ರಿ ಟ್ರೀಟ್ಮೆಂಟ್’ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.