ಲಾರಿ ಢಿಕ್ಕಿ: ಬೈಕ್‌ ಸವಾರ ಮೃತ್ಯು

Update: 2019-09-14 16:39 GMT

ಬೆಂಗಳೂರು, ಸೆ.14: ಕ್ಯಾಂಟರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಸಾಗುತ್ತಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಗೊರಗುಂಟೆ ಪಾಳ್ಯದ ಶಾಹೀದ್(26) ಎಂಬಾತ ಯುವಕ ಮೃತಪಟ್ಟಿದ್ದು, ಘಟನೆಯಲ್ಲಿ ಇರ್ಫಾನ್ ಎಂಬುವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಡದಿ ಮೂಲದ ಶಾಹೀದ್, ಗೊರಗುಂಟೆ ಪಾಳ್ಯದಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದು, ಶುಕ್ರವಾರ ರಾತ್ರಿ ಸ್ನೇಹಿತ ಇರ್ಫಾನ್ ಜತೆ ಕೆಂಗೇರಿ ಕಡೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಸುರಾನ ಕಾಲೇಜು ಬಳಿ ಮುಂದೆ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕಲು ಹೋದಾಗ ಅದೇ ಲಾರಿ ಢಿಕ್ಕಿ ಹೊಡೆದು ಕೆಳಗೆ ಬಿದ್ದ ಪರಿಣಾಮ ಶಾಹೀದ್ ಹಾಗೂ ಇರ್ಫಾನ್ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಶಾಹೀದ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರೆ, ಇರ್ಫಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News