ವಿಚಾರಣೆ ವೇಳೆ ಕೋರ್ಟ್ ಬಳಿ ಬರಬೇಡಿ: ಅಭಿಮಾನಿಗಳಿಗೆ ಡಿಕೆ ಸುರೇಶ್ ಮನವಿ

Update: 2019-09-15 05:55 GMT

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದು ಡಿಕೆಶಿ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರು ಮನವಿ ಮಾಡಿದ್ದಾರೆ.

‘ವಿಚಾರಣೆ ಸಂದರ್ಭ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ. ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇಕು ಎಂದು ನಾನು ಹಾಗೂ ಡಿಕೆ ಶಿವಕುಮಾರ್ ಅವರು ವಿನಂತಿ ಮಾಡಿಕೊಳ್ಳುತ್ತೇವೆ’ ಎಂದು ಸುರೇಶ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಕಾನೂನಿಗೆ ಗೌರವ ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಹೀಗಾಗಿ ಆಡಳಿತಾತ್ಮಕ ಹಾಗೂ ನ್ಯಾಯಾಂಗ ಪ್ರಕ್ರಿಯೆ ಸುಗಮವಾಗಿ ಸಾಗಲು ನಾವು ಈ ಮನವಿ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ಸಿಗಲಿದೆ ಎಂಬ ನಿರೀಕ್ಷೆ ಇದೆ’ ಎಂದು ವಿವರಿಸಿದ್ದಾರೆ.

ಕಳೆದ ಶುಕ್ರವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೋರ್ಟ್ ಆವರಣದಲ್ಲಿ ಜಮಾಯಿಸಿದ್ದರು. ಈ ವೇಳೆ ಸ್ವತಃ ಡಿಕೆ ಶಿವಕುಮಾರ್ ಅವರು ಕಾರ್ಯಕರ್ತರ ಬಳಿ ಬಂದು ‘ತನಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದ ತಿಳಿಸಿ, ತನಗೆ ಏನೂ ಆಗುವುದಿಲ್ಲ. ಕಾನೂನಿನ ಹೋರಾಟದಲ್ಲಿ ಜಯಿಸುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೋರ್ಟ್ ಆವರಣದಿಂದ ತೆರಳಿ ತಮ್ಮ ಊರುಗಳಿಗೆ ವಾಪಸ್ಸಾಗಿ’ ಎಂದು ಮನವಿ ಮಾಡಿದ್ದನ್ನು ನಾವು ಸ್ಮರಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News