ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
Update: 2019-09-17 05:46 GMT
ಹೊಸದಿಲ್ಲಿ, ಸೆ.17: ಕರ್ನಾಟಕದ ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸೆ.23ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಮೋಹನ್ ಶಾಂತನ ಗೌಡರ್ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ನ್ಯಾಯಮೂರ್ತಿ ಮೋಹನ್ ಶಾಂತನ ಗೌಡರ್ ಕರ್ನಾಟಕ ಮೂಲದವರು. ಅವರು ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ನ್ಯಾಯಪೀಠಕ್ಕೆ ಬೇರೆ ನ್ಯಾಯಮೂರ್ತಿಯ ನೇಮಕವಾಗಬೇಕಿದೆ.
ನ್ಯಾಯಮೂರ್ತಿ ಎಂ.ವಿ.ರಮಣ್ ನೇತೃತ್ವದ ಪೀಠ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಾಗ ಪೀಠದ ಸದಸ್ಯರಾದ ನ್ಯಾಯಮೂರ್ತಿ ಮೋಹನ್ ಶಾಂತನ ಗೌಡರ್ ವಿಚಾರಣೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದರು.
ಅನರ್ಹಗೊಂಡಿರುವ ಕಾಂಗ್ರೆಸ್-ಜೆಡಿಎಸ್ನ 17 ಶಾಸಕರು ಅಂದಿನ ಸಭಾಧ್ಯಕ್ಷ ಕೆ. ರಮೇಶ್ಕುಮಾರ್ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.