ಬಳ್ಳಾರಿ ಜಿಲ್ಲೆಗೆ 833 ಕೋಟಿ ರೂ. ಅನುದಾನ ಹಂಚಿಕೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

Update: 2019-09-17 12:06 GMT

ಬಳ್ಳಾರಿ, ಸೆ.17: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಸರಕಾರ ವಿಶೇಷ ಒತ್ತು ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 2013-14ನೇ ಸಾಲಿನಿಂದ 2019-20ಸಾಲಿನವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು 832.82 ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಒಟ್ಟು 3255 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2104 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ 422.68 ಕೋಟಿ ರೂ.ಅನುದಾನ ವೆಚ್ಚ ಮಾಡಲಾಗಿದೆ ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಹತ ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ. ಬಳ್ಳಾರಿ ಜಿಲ್ಲೆಯಿಂದ ವಿವಿಧ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ 371(ಜೆ) ಮೀಸಲಾತಿ ಅಡಿಯಲ್ಲಿ ಆಯ್ಕೆಯಾಗಿ ಉದ್ಯೋಗ ಪಡೆದಿದ್ದಾರೆ ಎಂದು ಅವರು ವಿವರಿಸಿದರು.

ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ ಎಲ್ಲ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲೆಯ ಕಂದಾಯ ಅಧಿಕಾರಿಗಳು ತಮ್ಮಲ್ಲಿ ಲಭ್ಯವಿರುವ ಓ.ಟಿ.ಸಿ. ಮಾಹಿತಿಯನ್ನು ಆಧಾರವಾಗಿಟ್ಟಿಕೊಂಡು ಸ್ವಯಂ ಪ್ರೇರಿತವಾಗಿ 11609 ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದಾರೆ. 14962 ಫಲಾನುಭವಿಗಳನ್ನು ಕಂದಾಯ ಅಧಿಕಾರಿಗಳು ಅಟಲ್ ಜೀ ಜನಸ್ನೇಹಿ ಕೇಂದ್ರಕ್ಕೆ ಕರೆತಂದು ಅರ್ಜಿ ಸಲ್ಲಿಸಿರುತ್ತಾರೆ. 9420 ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಅವರು ವಿವರಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ವತಿಯಿಂದ ನಗರ ಪ್ರದೇಶದಲ್ಲಿ ಎಸ್.ಎಫ್.ಸಿ. ನಿಧಿಯಡಿ 2018-19ನೇ ಮತ್ತು 2019-20ನೇ ಸಾಲಿನಲ್ಲಿ 7.01 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು ಒಟ್ಟು 295 ಕಾಮಗಾರಿಗಳನ್ನು ಕೈಗೆತ್ತಿಕೊಂಡು ಈವರೆಗೆ 2.24 ಕೋಟಿ ರೂ.ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

3.27 ಕೋಟಿ ರೂ. ಪರಿಹಾರ ವಿತರಣೆ: ಆಗಸ್ಟ್ ತಿಂಗಳಲ್ಲಿ ಮಲೆನಾಡು ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದ ತುಂಗಭದ್ರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಹಿನ್ನೀರಿನ ತಾಲೂಕುಗಳಾದ ಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳಲ್ಲಿ ಪ್ರವಾಹ ಸಂಭವಿಸಿದ್ದು, ಸರಕಾರವು ಈ ಎರಡು ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ ಎಂದು ಅವರು ಹೇಳಿದರು.

ಪ್ರವಾಹದಿಂದ ಸಂಭವಿಸಿದ ಮನೆಗಳ ಹಾನಿಗೆ ಸರಕಾರದ ಆದೇಶದಂತೆ ಬಟ್ಟೆ ಮತ್ತು ಪಾತ್ರೆಗಳು ಹಾನಿಯಾದ 802 ಕುಟುಂಬಗಳಿಗೆ 10 ಸಾವಿರ ರೂ.ಗಳಂತೆ 80.20 ಲಕ್ಷ ರೂ.ಗಳ ಪರಿಹಾರ ಹಾಗೂ 1030 ಮನೆಗಳ ಹಾನಿಗೆ 25 ಸಾವಿರ ರೂ.ಗಳಂತೆ 2.57 ಕೋಟಿ ರೂ.ಪರಿಹಾರ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಲಕ್ಷ್ಮಣ ಸವದಿ ತಿಳಿಸಿದರು.

ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಾರದಂತೆ 13 ಮೇವು ಬ್ಯಾಂಕ್ ಮತ್ತು 9 ಗೋಶಾಲೆಗಳನ್ನು ತೆರೆದು ಮೇವನ್ನು ಜಾನುವಾರುಗಳಿಗೆ ವಿತರಣೆ ಮಾಡಲಾಗುತ್ತಿದೆ. 8683 ರೈತರಿಗೆ 34,694 ಮೇವಿನ ಕಿರು ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗಿದೆ. ಎಸ್.ಡಿ.ಆರ್.ಎಫ್ ನಿಧಿಯಿಂದ ಕುಡಿಯುವ ನೀರಿಗೆ ಮತ್ತು ಮೇವು ವಿತರಣೆಗೆ 7 ಕೋಟಿ ರೂ.ಅನುದಾನ ವೆಚ್ಚ ಮಾಡಲಾಗಿದೆ ಎಂದು ಅವರು ವಿವರಿಸಿದರು.

 ಕಾರ್ಯಕ್ರಮದಲ್ಲಿ ಹೈಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಿರಿಗೆರೆ ಪೊನ್ನರಾಜ್, ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಈ.ತುಕಾರಾಂ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿಸಿ.ಕೆ.ಬಾಬಾ, ವಿನೋದ್, ಈಶ್ವರ್ ಕಾಂಡೂ ಸೇರಿದಂತೆ ಅನೇಕರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News