‘ಸಚಿವ ಈಶ್ವರಪ್ಪ ಖಡ್ಗ ಪ್ರದರ್ಶಿಸಿ ಕೋಮುಗಲಭೆಗೆ ಪ್ರಚೋದನೆ’: ಕಠಿಣ ಕ್ರಮ ಕೈಗೊಳ್ಳಲು ಎಸ್ಡಿಪಿಐ ಆಗ್ರಹ
Update: 2019-09-18 16:37 GMT
ಮಂಗಳೂರು, ಸೆ.18: ಸೈನಿಕರು, ಮುಸ್ಲಿಂ ಸಮುದಾಯ ಮತ್ತು ಮಂಗಳಮುಖಿಯರಿಗೆ ಅವಮಾನ ಮಾಡುವ ರೀತಿಯಲ್ಲಿ ಬೆಂಗಳೂರಿನಲ್ಲಿ ಭಾಷಣ ಮಾಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ, ಖಡ್ಗ ಪ್ರದರ್ಶಿಸಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಎಸ್ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಆರೋಪಿಸಿದ್ದಾರೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರಿಗೆ ಬುಧವಾರ ಮನವಿ ಸಲ್ಲಿಸಿ, ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದರು.
ಬೆಂಗಳೂರಿನ ಪುರಭವನದಲ್ಲಿ ಶ್ರೀರಾಮಸೇನೆ ಬೆಂಗಳೂರು ನಗರ ಸಮಿತಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮ ಆಯೋಜಿಸಿದವರು ಮತ್ತು ಉದ್ರೇಕಕಾರಿ ಭಾಷಣ ಮಾಡಿರುವ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದರು.